ರಾಹುಲ್ ಗಾಂಧಿ - ಮಲ್ಲಿಕಾರ್ಜುನ ಖರ್ಗೆ 
ದೇಶ

ಸಂಸತ್ ಅಧಿವೇಶನ ಕರೆಯುವಂತೆ ರಾಹುಲ್ ಗಾಂಧಿ ಒತ್ತಾಯ: ಸರ್ವಪಕ್ಷ ಸಭೆ ಬಳಿಕ ಖರ್ಗೆ

ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸದಿರುವುದು ತೀವ್ರ ನಿರಾಶೆ ಮೂಡಿಸಿದೆ ಎಂದರು.

ನವದೆಹಲಿ: 'ಆಪರೇಷನ್ ಸಿಂಧೂರ್' ಕುರಿತ ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಬೆಂಬಲ ಸೂಚಿಸಿವೆ. ಉತ್ತಮ ಸಂದೇಶ ನೀಡಲು ಸಂಸತ್ ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಒತ್ತಾಯಿಸಿದರು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸದಿರುವುದು ತೀವ್ರ ನಿರಾಶೆ ಮೂಡಿಸಿದೆ ಎಂದರು.

"ಪ್ರಧಾನಿ ಭಾಗವಹಿಸಿ ಭಯೋತ್ಪಾದನೆ ವಿರುದ್ಧದ ಕ್ರಮದ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡುತ್ತಾರೆ ಎಂದು ನಾವು ಬಯಸಿದ್ದೆವು. ಆದರೆ ಅವರು ಬರಲಿಲ್ಲ. ಕಳೆದ ಬಾರಿ ನಡೆದ ಸರ್ವಪಕ್ಷ ಸಭೆಗೂ ಪ್ರಧಾನಿ ಹಾಜರಾಗಿರಲಿಲ್ಲ" ಎಂದು ಖರ್ಗೆ ಹೇಳಿದರು.

ಇಂಡಿಯಾ ಬಣದ ಎಲ್ಲಾ ಪಕ್ಷಗಳು ಮತ್ತು ಇತರ ಪಕ್ಷಗಳು ಸಹ ಒಂದೇ ಧ್ವನಿಯಲ್ಲಿ ಮಾತನಾಡಿ, "ನೀವು ಮುಂದುವರಿಯಿರಿ ಮತ್ತು ನೀವು ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ನಾವು ನಿಮ್ಮೊಂದಿಗಿದ್ದೇವೆ ಮತ್ತು ಸೈನ್ಯದೊಂದಿಗೆ ನಿಲ್ಲುತ್ತೇವೆ" ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.

ಪ್ರಧಾನಿಯವರು ಸೇನೆಗೆ, ಉಗ್ರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಂಪೂರ್ಣ ಅಧಿಕಾರ ನೀಡಿರುವುದಾಗಿ ಹೇಳಿದ್ದಾರೆ ಎಂದು ಖರ್ಗೆ ತಿಳಿಸಿದರು.

"ಇದು ಸೂಕ್ಷ್ಮ ಸಮಯ ಮತ್ತು ದೇಶದ ಹಿತಾಸಕ್ತಿಗಾಗಿ, ರಕ್ಷಣಾ ರಹಸ್ಯಗಳಂತಹ ವಿವರವಾದ ಪ್ರಶ್ನೆಗಳನ್ನು ಕೇಳಬಾರದು ಎಂದು ರಕ್ಷಣಾ ಸಚಿವ(ರಾಜನಾಥ್ ಸಿಂಗ್)ರು ಹೇಳಿದರು" ಎಂದು ಖರ್ಗೆ ತಿಳಿಸಿದರು.

ಸಭೆಯಲ್ಲಿ ಹಾಜರಿದ್ದವರು ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರ ಭದ್ರತೆಯ ವಿಷಯವನ್ನು ಪ್ರಸ್ತಾಪಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬವನ್ನು ಸರ್ಕಾರ ನೋಡಿಕೊಳ್ಳಬೇಕು ಎಂದು ಖರ್ಗೆ ಹೇಳಿದರು.

"ಸರ್ಕಾರವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಮಗೆ ಭರವಸೆ ನೀಡಿದ್ದಾರೆ" ಎಂದು ಖರ್ಗೆ ತಿಳಿಸಿದರು.

ಒಳ್ಳೆಯ ಸಂದೇಶ ನೀಡಲು ಸಂಸತ್ ಅಧಿವೇಶನ ಕರೆಯಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಅಧಿವೇಶನ ಕರೆದರೆ, ಸಂಸದರು ತಮ್ಮ ಅಭಿಪ್ರಾಯಗಳನ್ನು ಮಂಡಿಸಬಹುದು ಮತ್ತು ಜನರ ವಿಶ್ವಾಸವನ್ನು ಹೆಚ್ಚಿಸಬಹುದು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಭರವಸೆ ನೀಡಲಿಲ್ಲ" ಎಂದು ಖರ್ಗೆ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT