ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಅವಂತಿಪೋರಾದ ನಾಡರ್ ಟ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿದ್ದವು.
ಉಗ್ರರು ಅಡಗಿ ಕುಳಿತಿರುವ ಸ್ಥಳದತ್ತ ಭದ್ರತಾ ಪಡೆಗಳು ತಲುಪುತ್ತಿದ್ದಂತೆಯೇ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ.
ಈ ವೇಳೆ ಭಾರತೀಯ ಸೇನೆಯು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು CRPF ಜೊತೆಗೂಡಿ ಆಪರೇಷನ್ ನಾಡರ್ ಅನ್ನು ಪ್ರಾರಂಭಿಸಿದೆ.
ಈ ವೇಳೆ ಪಹಲ್ಗಾಮ್ ದಾಳಿಯ ಸಮಯದಲ್ಲಿ ಸ್ಥಳದಲ್ಲಿ ಭಾಗಿಯಾಗಿದ್ದ ಮತ್ತು ಹಾಜರಿದ್ದ ಆಸಿಫ್ ಶೇಖ್ (LeT) ಎಂಬ ಉಗ್ರನನ್ನು ಕೊಲ್ಲಲಾಗಿದೆ.
ಅಲ್ಲದೆ, ನಿಜಾರ್ ವಾನಿ (LeT), ಯಾವರ್ ಭಟ್ (LeT) ಎಂಬ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರನ್ನು ಕೊಲ್ಲಲಾಗಿದೆ.
ಲಭ್ಯವಾಗಿರುವ ಮಾಹಿತಿಯಂತೆ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.