ಮುಂಬೈ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕಾರ್ಖಾನೆ ಮಾಲೀಕ, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸೋಲಾಪುರ ಎಂಐಡಿಸಿಯ ಅಕ್ಕಲ್ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಜವಳಿ ಮಿಲ್ಸ್ನಲ್ಲಿ ಇಂದು ಬೆಳಗಿನ ಜಾವ 3:45 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.
ಅಗ್ನಿ ಅವಘಡದಲ್ಲಿ ಕಾರ್ಖಾನೆಯ ಮಾಲೀಕ ಹಾಜಿ ಉಸ್ಮಾನ್ ಹಸನ್ಭಾಯ್ ಮನ್ಸೂರಿ, ಅವರ ಒಂದೂವರೆ ವರ್ಷದ ಮೊಮ್ಮಗ ಸೇರಿದಂತೆ ಅವರ ಕುಟುಂಬದ ಮೂವರು ಸದಸ್ಯರು ಮತ್ತು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗೆ ಐದರಿಂದ ಆರು ಗಂಟೆಗಳು ಬೇಕಾಯಿತು ಎಂದು ಅವರು ಹೇಳಿದ್ದಾರೆ.