ತಿರುವನಂತಪುರ: ಇರಾನ್ ಯುದ್ಧ ಮತ್ತು ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಗಡಿಯಲ್ಲಿ ಯಾವುದೇ ದುಷ್ಕೃತ್ಯ ನಡೆದರೆ ಭಾರತವು ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದಾರೆ.
ಸೈನಿಕ ಸಮ್ಮೇಳವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಪ್ರಾದೇಶಿಕ ಸಂಬಂಧ ಅಸ್ಥಿರವಾಗಿದ್ದು, ಹೆಚ್ಚುತ್ತಿರುವ ಅನಿಶ್ಚಿತ ಭೌಗೋಳಿಕ ರಾಜಕೀಯ ವಾತಾವರಣದಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ಕಾರ್ಯತಂತ್ರದ ಹಿತಾಸಕ್ತಿಗಳನ್ನು ಕಾಪಾಡುವ ಸಂದರ್ಭದಲ್ಲಿ ಯಾವುದೇ ಪ್ರಚೋದನೆ ಎದುರಿಸಲು ನವದೆಹಲಿ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದರು.
ಗಡಿಯಾಚೆಯ ಪ್ರತಿಕೂಲ ಕ್ರಮಗಳ ಸಾಧ್ಯತೆಯ ಬಗ್ಗೆ ಭಾರತವು ಜಾಗರೂಕವಾಗಿದೆ. ಅಂತಹ ಯಾವುದೇ ಕ್ರಮವನ್ನು ದೃಢ ಮತ್ತು ನಿರ್ಣಾಯಕ ಪ್ರತಿಕ್ರಿಯೆಯೊಂದಿಗೆ ಎದುರಿಸಲಾಗುವುದು ಎಂದು ಎಚ್ಚರಿಸಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಾರಂಭವಾದ "ಆಪರೇಷನ್ ಸಿಂಧೂರ್" ಅನ್ನು ಉಲ್ಲೇಖಿಸಿದ ರಕ್ಷಣಾ ಸಚಿವರು, ಭಾರತೀಯ ಸಶಸ್ತ್ರ ಪಡೆಗಳು 22 ನಿಮಿಷಗಳಲ್ಲಿ ಪಾಕಿಸ್ತಾನವನ್ನು ಮಂಡಿಯೂರಿಸಿವೆ. ಇದು ಭಾರತದ ಮಿಲಿಟರಿ ಇತಿಹಾಸದಲ್ಲಿ ಇದುವರೆಗಿನ ಅತ್ಯಂತ ಮಹತ್ವದ ಉಗ್ರ ವಿರೋಧಿ ಕಾರ್ಯಾಚರಣೆ ಆಗಿದೆ. ಮಿಷನ್ ಇನ್ನೂ ಮುಂದುವರೆದಿದೆ. ಮತ್ತೆ ಏನಾದ್ರು ಕೆಣಕಿದ್ರೆ ಭಾರತದಿಂದ ತಕ್ಕ ಉತ್ತರ ನೀಡಲಾಗುವುದು ಎಂದರು.
ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಸರ್ಕಾರ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾವುದೇ ಅನಿಶ್ಚಿತತೆಗೆ ಸಿದ್ಧವಾಗಿದೆ ಎಂದು ಹೇಳಿದರು. ಇಂಧನ ಕೊರತೆಯ ವದಂತಿಗಳನ್ನು ತಳ್ಳಿಹಾಕಿದ ಅವರು, ಪೆಟ್ರೋಲ್ ಅಥವಾ ಡೀಸೆಲ್ ಪೂರೈಕೆಯಲ್ಲಿ ಯಾವುದೇ ಅಡ್ಡಿ ಇಲ್ಲ ಎಂದು ಪ್ರತಿಪಾದಿಸಿದರು.
ಭಾರತ ತನ್ನ ನಾಗರಿಕರು ಮತ್ತು ಹಿತಾಸಕ್ತಿಗಳ ರಕ್ಷಣೆಯನ್ನು ಖಾತ್ರಿಪಡಿಸಿಕೊಳ್ಳುವಾಗ ಸಂಘರ್ಷದಿಂದ ಉದ್ಭವಿಸುವ ಸವಾಲುಗಳಿಗೆ ಪ್ರತಿಕ್ರಿಯಿಸಲು ಸಿದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು.