ಪಟ್ಟನಂತಿಟ್ಟ: ಕಾಂಗ್ರೆಸ್, ರಾಜಕೀಯ ಲಾಭಕ್ಕಾಗಿ ಪಶ್ಚಿಮ ಏಷ್ಯಾದ ರಾಷ್ಟ್ರಗಳೊಂದಿಗಿನ ಭಾರತದ ಸಂಬಂಧವನ್ನು ಹದಗೆಡಿಸಲು "ಪ್ರಚೋದನಕಾರಿ" ಹೇಳಿಕೆಗಳನ್ನು ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಆರೋಪಿಸಿದ್ದಾರೆ.
ಇಂದು ಕೇರಳದ ಪಟ್ಟನಂತಿಟ್ಟ ಜಿಲ್ಲೆಯಲ್ಲಿ ನಡೆದ ಎನ್ಡಿಎ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ರಾಜಕೀಯವಾಗಿ ತಮ್ಮನ್ನು ಗುರಿಯಾಗಿಸಿಕೊಳ್ಳಲು ಇಂತಹ ಹೇಳಿಕೆಗಳನ್ನು ನೀಡಲಾಗುತ್ತಿದೆ. ಆದರೆ ವಿದೇಶದಲ್ಲಿರುವ ಭಾರತೀಯರ ಸುರಕ್ಷತೆಯು ತಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಪ್ರತಿಪಾದಿಸಿದರು.
"ನಾನು ಇದನ್ನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ, ಚುನಾವಣೆಗಳು ಬರುತ್ತವೆ ಮತ್ತು ಹೋಗುತ್ತವೆ. ಆದರೆ ಭಾರತೀಯರ, ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿರುವ ಕೇರಳದವರ ಸುರಕ್ಷತೆಯು ನನ್ನ ಪ್ರಮುಖ ಆದ್ಯತೆಯಾಗಿದೆ ಮತ್ತು ನಾನು ಅದನ್ನು ಖಚಿತಪಡಿಸುತ್ತೇನೆ" ಎಂದು ಪ್ರಧಾನಿ ಭರವಸೆ ನೀಡಿದರು.
ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಕೇರಳಿಗರಲ್ಲದೆ, ಗೋವಾ, ತಮಿಳುನಾಡು ಮತ್ತು ಇತರ ರಾಜ್ಯಗಳ ಮೀನುಗಾರರು ಸಹ ಸಂಘರ್ಷದಿಂದಾಗಿ ಇರಾನ್ ಮತ್ತು ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರು ಹೇಳಿದರು.
"ನಾವು ಅವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಪ್ರಯತ್ನಿಸುತ್ತಿದ್ದೇವೆ. ಆದರೆ, ಕಾಂಗ್ರೆಸ್ ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಪಶ್ಚಿಮ ಏಷ್ಯಾದ ದೇಶಗಳೊಂದಿಗಿನ ಭಾರತದ ಸಂಬಂಧವನ್ನು ಹದಗೆಡಿಸುವ ಮತ್ತು ಅನಗತ್ಯವಾಗಿ ಭೀತಿಯನ್ನು ಸೃಷ್ಟಿಸುವ ಹೇಳಿಕೆ ನೀಡುವ ಮೂಲಕ ಭಾರತೀಯರನ್ನು ಅಪಾಯಕ್ಕೆ ತಳ್ಳುತ್ತಿದೆ ಎಂದರು ಆರೋಪಿಸಿದರು.
"ಕಾಂಗ್ರೆಸ್ ಗೆ ಭಾರತದ ಜನರ ಬಗ್ಗೆ ಕಾಳಜಿ ಇಲ್ಲ. ಕಾಂಗ್ರೆಸ್ ಕೇರಳದ ಜನರ ನಂಬಿಕೆಗೆ ದ್ರೋಹ ಬಗೆದಿದೆ. ಅವರು ಕೇರಳದ ಮತ್ತು ರಾಷ್ಟ್ರದ ಜನರ ಕ್ಷಮೆಯಾಚಿಸಬೇಕು" ಎಂದು ಮೋದಿ ಹೇಳಿದರು.
ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು, ಪಶ್ಚಿಮ ಏಷ್ಯಾ ಸಂಘರ್ಷದ ಪರಿಸ್ಥಿತಿಯನ್ನು ನಿಭಾಯಿಸಿದ ರೀತಿಯನ್ನು ಟೀಕಿಸಿ, ಪ್ರಧಾನಿ ಮೋದಿ ಹೇಡಿ, ಅಮೆರಿಕ ಮತ್ತು ಇಸ್ರೇಲ್ ಮುಂದೆ ತಲೆಬಾಗಿದ್ದಾರೆ ಎಂದು ಆರೋಪಿಸಿದ ಕೆಲವು ದಿನಗಳ ನಂತರ ಮೋದಿ ಈ ಹೇಳಿಕೆ ನೀಡಿದ್ದಾರೆ.