ನವದೆಹಲಿ: ಲೋಕಸಭೆ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದಿಕ್ಕು ತಪ್ಪಿಸುವ ಅಸ್ತ್ರ ಎಂದು ಟೀಕೆ ಮಾಡಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಮೋದಿಯವರು ಜನರನ್ನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.
ಲೋಕಸಭೆಯ ಸದಸ್ಯರ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಿದರೆ ದಕ್ಷಿಣ ರಾಜ್ಯಗಳಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದು ಹಸಿ ಸುಳ್ಳು. ಇದು ಜನರನ್ನು ಮೋಸಗೊಳಿಸುವ ಪ್ರಯತ್ನ ಎಂದು ಅವರು ಆರೋಪಿಸಿದ್ದಾರೆ.
ಇದೇ ವೇಳೆ ಉದಾಹರಣೆ ನೀಡಿರುವ ಅವರು, ಉತ್ತರ ಪ್ರದೇಶ ಮತ್ತು ಕೇರಳ ನಡುವಿನ ಲೋಕಸಭೆ ಸ್ಥಾನಗಳ ವ್ಯತ್ಯಾಸ ಈಗ 60 ಇದ್ದರೆ, ಈ ಪ್ರಸ್ತಾವನೆ ಜಾರಿಗೆ ಬಂದರೆ ಅದು 90ಕ್ಕೆ ಏರಬಹುದು. ಅದೇ ರೀತಿ, ಉತ್ತರ ಪ್ರದೇಶ ಮತ್ತು ತಮಿಳುನಾಡು ನಡುವಿನ ವ್ಯತ್ಯಾಸವೂ ಹೆಚ್ಚಾಗಲಿದೆ ಎಂದು ಎಚ್ಚರಿಸಿದ್ದಾರೆ.
ಈ ಯೋಜನೆಯಿಂದ ಜನಸಂಖ್ಯೆ ಹೆಚ್ಚು ಇರುವ ರಾಜ್ಯಗಳಿಗೆ ಹೆಚ್ಚಿನ ಲಾಭವಾಗಲಿದೆ, ಪಂಜಾಬ್, ಹರಿಯಾಣ ಮತ್ತು ಈಶಾನ್ಯ ರಾಜ್ಯಗಳ ಪ್ರಭಾವ ಕಡಿಮೆಯಾಗುವ ಸಾಧ್ಯತೆ ಇದೆ. ಇದು ಪ್ರಾದೇಶಿಕ ಸಮತೋಲನವನ್ನು ಕದಡಲಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಆರ್ಥಿಕ ಮತ್ತು ವಿದೇಶಾಂಗ ಸಮಸ್ಯೆಗಳು ಗಂಭೀರವಾಗಿರುವಾಗ ಸರ್ಕಾರವು ಈ ರೀತಿಯ ವಿಷಯಗಳನ್ನು ಮುಂದಿಟ್ಟುಕೊಂಡು ಜನರ ಗಮನ ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
2029ರ ಸಾರ್ವತ್ರಿಕ ಚುನಾವಣೆಗಿಂತ ಮುಂಚಿತವಾಗಿ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರುವ ಭಾಗವಾಗಿ, ಲೋಕಸಭಾ ಸ್ಥಾನಗಳನ್ನು 543 ರಿಂದ 816ಕ್ಕೆ ಏರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. 2029ರ ಚುನಾವಣೆಗೆ ಮುನ್ನ ಮಹಿಳಾ ಮೀಸಲು ಕಾಯ್ದೆಯನ್ನು ಜಾರಿಗೆ ತರಲು ಅಗತ್ಯವಿರುವ ಕ್ರಮಗಳ ಭಾಗವಾಗಿ ಈ ಬದಲಾವಣೆಗಳನ್ನು ತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದಕ್ಕಾಗಿ, ಏಪ್ರಿಲ್ 16 ರಿಂದ ಮೂರು ದಿನಗಳ ವಿಶೇಷ ಸಂಸತ್ ಅಧಿವೇಶನವನ್ನು ಕರೆಯಲಾಗಿದೆ.
ಈ ನಡುವೆ ಪ್ರಧಾನಮಂತ್ರಿ ಮೋದಿ ಅವರು ಎಲ್ಲ ರಾಜ್ಯಗಳಿಗೂ ಯಾವುದೇ ಹಾನಿಯಾಗುವುದಿಲ್ಲ ಎಂದು ಭರವಸೆ ನೀಡಿದ್ದು, ಕೇರಳ, ತಮಿಳುನಾಡು, ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯವೂ ಸ್ಥಾನ ಕಳೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಮಹಿಳಾ ಸಬಲೀಕರಣದ ದೃಷ್ಟಿಯಿಂದ ಈ ಕ್ರಮವನ್ನು ರಾಜಕೀಯದಿಂದ ದೂರವಿಟ್ಟು ಬೆಂಬಲಿಸಬೇಕೆಂದು ಅವರು ಎಲ್ಲಾ ಪಕ್ಷಗಳಿಗೆ ಮನವಿ ಮಾಡಿದ್ದಾರೆ.
ಆದರೆ, ಕಾಂಗ್ರೆಸ್ ಈ ಕ್ರಮವನ್ನು ಚುನಾವಣಾ ಲಾಭಕ್ಕಾಗಿ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದು, ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಚುನಾವಣೆಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟೀಕಿಸಿದೆ.