ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸೇತುವೆಯೊಂದರಲ್ಲಿ ಸೋಮವಾರ ಕಾಂಕ್ರೀಟ್ ಮಿಕ್ಸರ್ ಲಾರಿ, ವ್ಯಾನ್ ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಹನ್ನೊಂದು ಜನ ಮೃತಪಟ್ಟಿದ್ದಾರೆ ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುರ್ಬಾದ್ನ ಗೋವಿಲಿ ಗ್ರಾಮದ ರೈಟಾ ಸೇತುವೆಯ ಮೇಲೆ ಇಂದು ಬೆಳಗ್ಗೆ 10.45 ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಕಲ್ಯಾಣ್ನಿಂದ ಮುರ್ಬಾದ್ಗೆ ಹೋಗುತ್ತಿದ್ದ ವ್ಯಾನ್, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸಿಮೆಂಟ್ ಮಿಕ್ಸರ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದರು.
ವ್ಯಾನ್ನಲ್ಲಿದ್ದ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಾಳುಗಳನ್ನು ಉಲ್ಹಾಸ್ನಗರದ ಕೇಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮುರ್ಬಾದ್ ತಹಶೀಲ್ದಾರ್ ಅಭಿಜಿತ್ ದೇಶಮುಖ್ ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಆರು ಜನರನ್ನು ಗುರುತಿಸಲಾಗಿದ್ದು, ಉಳಿದವರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರಲ್ಲಿ ಎಂಟು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.