ನೋಯ್ಡಾ: ನೋಯ್ಡಾದ ಕೆಲವು ಭಾಗಗಳಲ್ಲಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಕಾರ್ಖಾನೆ ಕಾರ್ಮಿಕರು ಸೋಮವಾರ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹಂತ -2 ಮತ್ತು ಸೆಕ್ಟರ್ 60 ಪ್ರದೇಶಗಳಲ್ಲಿ ಕಲ್ಲು, ತೂರಾಟ ನಡೆಸಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೋಯ್ಡಾದಲ್ಲಿ ಕಾರ್ಮಿಕರು ಬೆಂಕಿ ಹಚ್ಚಿದ ವಿಧ್ವಂಸಕ ಕೃತ್ಯ ಮತ್ತು ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ವಿವಿಧ ಕೈಗಾರಿಕಾ ಘಟಕಗಳ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ವೇತನ ಪರಿಷ್ಕರಣೆಗಾಗಿ ತಮ್ಮ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಭಾರೀ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದರು.
ಕೆಲವು ಕಾರ್ಮಿಕರು ಕಾರ್ಖಾನೆಯ ಆಸ್ತಿಯನ್ನು ಧ್ವಂಸಗೊಳಿಸಿದರು ಮತ್ತು ಕೆಲವು ಪ್ರತಿಭಟನಾಕಾರರು ಕಲ್ಲು ತೂರಿದರು. ಅಲ್ಲದೆ ಕೆಲವರು ವಾಹನಕ್ಕೆ ಬೆಂಕಿ ಹಚ್ಚಿದರು ಎಂದು ಆರೋಪಿಸಲಾಗಿದೆ.
ಹಿಂಸಾಚಾರದಲ್ಲಿ ಹಲವು ವಾಹನಗಳು ಮತ್ತು ಇತರ ಆಸ್ತಿಗಳು ಹಾನಿಗೊಳಗಾಗಿದ್ದ, ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿದ್ದು, ಸಂಚಾರ ದಟ್ಟಣೆಯಿಂದಾಗಿ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಗೌತಮ್ ಬುದ್ಧ ನಗರ ಆಯುಕ್ತಾಲಯದ ವ್ಯಾಪ್ತಿಯ ಕೈಗಾರಿಕಾ ವಲಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸ್ಥಳದಲ್ಲಿದ್ದಾರೆ ಎಂದು ಅವರು ಹೇಳಿದರು.