ಚೆನ್ನೈ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಮಹತ್ವದ ನಿರ್ಧಾರಗಳಲ್ಲಿ ಒಂದಾದ ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ವಿರೋಧಿಸಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಸೂದೆಯ ಪ್ರತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದ್ದಾರೆ.
ಇಂದು ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಸಿದ್ಧವಾಗಿರುವ ಉದ್ದೇಶಿತ ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ವಿರೋಧಿಸಿ ನಾಮಕ್ಕಲ್ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕಪ್ಪು ಬಾವುಟ ಪ್ರದರ್ಶಿಸಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಯನ್ನು ಸುಟ್ಟು ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ತೀವ್ರವಾಗಿ ಕಡಿಮೆಯಾಗಲಿರುವ ಸೀಮಾ ನಿರ್ಣಯ ಮಸೂದೆಯನ್ನು ಅಂಗೀಕರಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನೀಡಲಾದ ‘ಕಠಿಣ ಎಚ್ಚರಿಕೆ’ಯ ನಂತರ ಈ ಪ್ರತಿಭಟನೆ ನಡೆಯುತ್ತಿದೆ.
ಸಿಎಂ ಎಂಕೆ ಸ್ಟಾಲಿನ್ ಅವರ ಪ್ರತಿಭಟನೆಯ ನಂತರ, ಡಿಎಂಕೆ ಕಪ್ಪು ಬಾವುಟಗಳನ್ನು ಹಾರಿಸಿ ಮಸೂದೆಯ ಪ್ರತಿಗಳನ್ನು ಸುಡುವ ಮೂಲಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಜ್ಜಾಗಿದೆ. ಜನರು ತಮ್ಮ ಮನೆಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಮೂರು ದಿನಗಳ ಕಾಲ ಕಪ್ಪು ಬಾವುಟಗಳನ್ನು ಹಾರಿಸಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಬೇಕೆಂದು ಸ್ಟಾಲಿನ್ ಒತ್ತಾಯಿಸಿದ್ದರು. ಈ ಹಿನ್ನೆಲೆ ಮೊದಲು ಮಾಜಿ ಸಿಎಂ ಎಂ ಕರುಣಾನಿಧಿ ಅವರ ಗೋಪಾಲಪುರಂ ನಿವಾಸದಲ್ಲಿ ಕಪ್ಪು ಬಾವುಟವನ್ನು ಹಾರಿಸಲಾಯಿತು.
ಪ್ರತಿಭಟನೆಯ ಕುರಿತು ಮಾತನಾಡಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಈ ಪ್ರತಿಭಟನೆಯು ಬಿಜೆಪಿ ಸರ್ಕಾರವನ್ನು ಉರುಳಿಸುತ್ತದೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಹೇಳಿದ್ದಾರೆ. ತಮಿಳುನಾಡಿನಾದ್ಯಂತ ಪ್ರತಿರೋಧದ ಜ್ವಾಲೆ ಹರಡಲಿ. ಬಿಜೆಪಿಯ ದುರಹಂಕಾರವನ್ನು ಅಡಗಿಸಲಿ ಎಂದು ಎಂಕೆ ಸ್ಟಾಲಿನ್ ತಮ್ಮ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.