ಸಂಸತ್ತಿನ ವಿಶೇಷ ಅಧಿವೇಶನವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಶುಕ್ರವಾರ ಅಪರಾಹ್ನ 4 ಗಂಟೆಗೆ ನಡೆಯಲಿರುವ ಮತದಾನಕ್ಕೂ ಮುನ್ನ ಎನ್ಡಿಎ ಮತ್ತು ವಿರೋಧ ಪಕ್ಷಗಳು ಮಹಿಳಾ ಮೀಸಲಾತಿ(Women reservation) ಹಾಗೂ ಕ್ಷೇತ್ರ ಮರುವಿಂಗಡಣೆ (Delimitation) ಮಸೂದೆಗಳ ಬಗ್ಗೆ ಚರ್ಚೆಯನ್ನು ಮುಂದುವರಿಸಿವೆ.
ನಿನ್ನೆ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘ್ವಾಲ್ ಮತ್ತು ಅಮಿತ್ ಶಾ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕಾನೂನಿನಲ್ಲಿ ತಿದ್ದುಪಡಿ ಮಾಡಲು ಹಾಗೂ ಕ್ಷೇತ್ರ ಪುನರ್ವಿಂಗಡಣೆ ಆಯೋಗವನ್ನು ರಚಿಸಲು ಮೂರು ಮಸೂದೆಗಳನ್ನು ಮಂಡಿಸಿದರು. ವಿರೋಧ ಪಕ್ಷಗಳು ಈ ಮಸೂದೆಗಳನ್ನು ಭಾರತದ ಫೆಡರಲ್ ರಚನೆ ಮೇಲೆ ದಾಳಿ ಎಂದು ಟೀಕಿಸಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕ್ಷೇತ್ರ ಮರುವಿಂಗಡಣೆಯಲ್ಲಿ ಯಾವುದೇ ರಾಜ್ಯಕ್ಕೂ ಅನ್ಯಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ, ವಿರೋಧ ಪಕ್ಷಗಳು ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕರಿಸಿದರೆ ಭಾರತದಲ್ಲಿ ಪ್ರಜಾಸತ್ತಾತ್ಮಕ ವ್ಯವಸ್ಥೆ ಹಾನಿಯಾಗುತ್ತದೆ ಎಂದು ಆರೋಪಿಸಿವೆ. ಇದರಿಂದ ಎನ್ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆದಿದೆ.
ಮೂರು ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿದರೆ ದೀರ್ಘಕಾಲದ ರಾಜಕೀಯ ಬೆಲೆ ಕಟ್ಟಬೇಕಾಗುತ್ತದೆ ಎಂದು ಪ್ರಧಾನಿ ಮೋದಿ ವಿರೋಧ ಪಕ್ಷಗಳಿಗೆ ಎಚ್ಚರಿಕೆ ನೀಡಿದರು. ಹಿಂದೆಯೂ ಇದಕ್ಕೆ ವಿರೋಧಿಸಿದವರು ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ ಎಂದು ಹೇಳಿದರು.
ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸಿಂಗ್
ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಅವರನ್ನು ಅವಿರೋಧವಾಗಿ ಮೂರನೇ ಅವಧಿಗೆ ಆಯ್ಕೆ ಮಾಡಲಾಗಿದೆ. ಇಂದು ನಡೆಯಬೇಕಿದ್ದ ಚುನಾವಣೆಯನ್ನು ವಿರೋಧ ಪಕ್ಷಗಳು ಬಹಿಷ್ಕರಿಸಿದ್ದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆದಿದೆ. ಸರ್ಕಾರ ಸಂಸತ್ತಿನ ಪರಂಪರೆಯನ್ನು ಹಾಳು ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಪ್ರಧಾನಿ ಮೋದಿ ಶುಭಾಶಯ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಸಭೆಯ ಉಪಾಧ್ಯಕ್ಷರಾಗಿ ಮರು ಅವಧಿ ಪ್ರಾರಂಭಿಸಿರುವ ಹರಿವಂಶ್ ಸಿಂಗ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ನೀವು ನಿಮ್ಮ ಹೊಸ ಅವಧಿಯನ್ನು ಮಾಜಿ ಪ್ರಧಾನಮಂತ್ರಿ ಚಂದ್ರಶೇಖರ್ ಅವರ ಜನ್ಮ ದಿನದಂದು ಪ್ರಾರಂಭಿಸುತ್ತಿರುವುದು ಭಾಗ್ಯಕರವಾಗಿದೆ ಎಂದು ಮೋದಿ ಅವರು ಹರಿವಂಶ್ ಅವರಿಗೆ ತಿಳಿಸಿದ್ದಾರೆ.
ಹರಿವಂಶ್ ಅವರು ಯುವಜನತೆಯೊಂದಿಗೆ ಸಮಯ ಕಳೆಯುವುದನ್ನು ಆದ್ಯತೆಯಾಗಿ ತೆಗೆದುಕೊಂಡಿದ್ದಾರೆ. ಅವರು ವಿಶ್ವವಿದ್ಯಾಲಯಗಳಲ್ಲಿ 350 ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ, ಯುವಜನತೆ ಜೊತೆಗೆ ಸಂಪರ್ಕ ಸಾಧಿಸುವ ಗುರಿಯಿಂದ ನೀವು ಎಂದಿಗೂ ವಿಚಲಿತರಾಗಿಲ್ಲ ಎಂದು ಪ್ರಧಾನಿ ಮೋದಿ ಪ್ರಶಂಸಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಹಾಗೂ ಇನ್ನೂ 25 ವರ್ಷಗಳ ಕಾಲ ಪ್ರಸ್ತುತ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಹಾಗೆಯೇ ಉಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಸರ್ಕಾರಗಳು ನೀಡಿದ ಭದ್ರತೆಗಳನ್ನು ಪುನಃ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ಈ ಮಸೂದೆಯನ್ನು ತುರ್ತಾಗಿ ಅಂಗೀಕರಿಸಬಾರದು. ಕೇಂದ್ರ ಸರ್ಕಾರವು ಇದನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ನಮ್ಮ ವಿರೋಧವನ್ನು ಕಡೆಗಣಿಸಿ ಸಂಸತ್ತಿನಲ್ಲಿ ಇದನ್ನು ಬಲವಂತವಾಗಿ ಅಂಗೀಕರಿಸಲು ಪ್ರಯತ್ನಿಸಿದರೆ ತಮಿಳುನಾಡಿನಲ್ಲಿ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸ್ಟಾಲಿನ್ ‘ಎಕ್ಸ್’ ನಲ್ಲಿ ಬರೆದಿದ್ದಾರೆ.
ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕ ಗೌರವ್ ಗೊಗೋಯಿ ಅವರು, ಮಹಿಳಾ ಮೀಸಲಾತಿ ಹೆಸರಿನಲ್ಲಿ ಡಿಲಿಮಿಟೇಶನ್ ನ್ನು ಹಿಂಬಾಗಿಲಿನಿಂದ ಜಾರಿಗೆ ತರುತ್ತಿದೆ ಎಂದು ಸರ್ಕಾರದ ವಿರುದ್ಧ ಆರೋಪಿಸಿದರು. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು, ಈ ಮಸೂದೆ ಚುನಾವಣಾ ಲಾಭಕ್ಕಾಗಿ ತರಲಾಗಿದ್ದು, ಸುಧಾರಣೆಗಾಗಿ ಅಲ್ಲ, ಬಿಜೆಪಿ ಅಧಿಕಾರದಲ್ಲಿ ಉಳಿಯಲು ಸಹಾಯ ಮಾಡಲು ಉದ್ದೇಶಿತವಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಚುನಾವಣಾ ಆಯೋಗ ಮತ್ತು ನ್ಯಾಯಾಂಗ ಸಂಸ್ಥೆಗಳ ಮೇಲೆ ಒತ್ತಡ ಹಾಕುವ ಮೂಲಕ ಸರ್ಕಾರ ಈಗಾಗಲೇ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿ, ಈಗ ಸಂವಿಧಾನ ತಿದ್ದುಪಡಿ ಮಸೂದೆ ಮೂಲಕ ಬಹಿರಂಗ ದಾಳಿ ನಡೆಸುತ್ತಿದೆ ಎಂದು ತೀವ್ರ ಟೀಕೆ ಮಾಡಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಗಳನ್ನು ಅಂಗೀಕರಿಸಲು ಅಗತ್ಯವಾದ ಮೂರನೇ ಎರಡು ಬಹುಮತ ಎನ್ಡಿಎ ಬಳಿ ಇಲ್ಲ. ಪ್ರಸ್ತುತ ಲೋಕಸಭೆಯಲ್ಲಿ ಎನ್ಡಿಎಗೆ 293 ಸದಸ್ಯರ ಬೆಂಬಲವಿದ್ದು, ಇದು ಸಭೆಯ 54 ಶೇಕಡಾ ಆಗಿದೆ. ವಿರೋಧ ಪಕ್ಷಗಳಿಗೆ 233 ಸಂಸದರು ಇದ್ದಾರೆ. ಸಂವಿಧಾನ ತಿದ್ದುಪಡಿ ಮಸೂದೆ ಸೇರಿದಂತೆ ಈ ಮಸೂದೆಗಳನ್ನು ಅಂಗೀಕರಿಸಲು ಹಾಜರಿದ್ದು ಮತ ಚಲಾಯಿಸುವ ಸದಸ್ಯರ ಮೂರನೇ ಎರಡು ಭಾಗದ ಬೆಂಬಲ ಅಗತ್ಯವಿದ್ದು, ಅದು ಸುಮಾರು 360 ಸಂಸದರನ್ನು ಒಳಗೊಂಡಿರಬೇಕು.