ಉಧಂಪುರ: ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ರಾಮ ನಗರ ಪ್ರದೇಶದ ಕಾಗೋರ್ಟ್ ಗ್ರಾಮದ ಬಳಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಡಿದಾದ ತಿರುವಿನಲ್ಲಿ ಬಸ್ ಸಾಗುತ್ತಿದ್ದಾಗ ದುರಂತ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ. ಬಳಿಕ ಪೊಲೀಸರು ಮತ್ತಿತರ ತುರ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದ್ದಾರೆ.
ಬಸ್ ಅವಶೇಷಗಳಿಂದ ಒಟ್ಟು 15 ಶವಗಳನ್ನು ಹೊರತೆಗೆಯಲಾಗಿದ್ದು, 20 ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರಲ್ಲಿ ಹಲವರ ಸ್ಥಿತಿ "ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಬಸ್ ದೂರದ ಹಳ್ಳಿಯಿಂದ ಉಧಂಪುರಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.
ಅಪಘಾತದ ನಂತರ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಉಧಮ್ಪುರದ ಉಪ ಆಯುಕ್ತ ಮಿಂಗಾ ಶೆರ್ಪಾ ಅವರೊಂದಿಗೆ ಮಾತನಾಡಿದ್ದು, ಗಂಭೀರವಾಗಿ ಗಾಯಗೊಂಡಿರುವ ಸಂತ್ರಸ್ತರನ್ನು ವಿಮಾನದ ಮೂಲಕ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಉಧಮ್ಪುರ ಜಿಲ್ಲಾಧಿಕಾರಿ ಮಿಂಗಾ ಶೆರ್ಪಾ ಅವರೊಂದಿಗೆ ಮಾತನಾಡಿದ್ದೇನೆ. ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಭಾರೀ ಸಾವುನೋವುಗಳನ್ನು ನಿರೀಕ್ಷಿಸಲಾಗಿದೆ.
ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡಲಾಗುತ್ತಿದೆ. ಗಾಯಾಳುಗಳನ್ನು ವೈದ್ಯಕೀಯ ಸಹಾಯಕ್ಕಾಗಿ ಸ್ಥಳಾಂತರಿಸಲಾಗುವುದು. ಗಂಭೀರವಾಗಿ ಗಾಯಗೊಂಡವರನ್ನು ವಿಮಾನದ ಮೂಲಕ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಸ್ಥಳೀಯ ಆಡಳಿತ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಬಿಜೆಪಿ ಸ್ಥಳೀಯ ಕಾರ್ಯಕರ್ತರ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಸಿಂಗ್ ತಿಳಿಸಿದ್ದಾರೆ.