ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದಿದ್ದ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಭಾರಿ ಹಿನ್ನಡೆ ಎದುರಾಗಿದೆ.
ಹೌದು.. ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರನ್ನು ವಿಚಾರಣೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳ ಮೇಲೆ ಮಾಡಲಾದ ಪಕ್ಷಪಾತದ ಆರೋಪಗಳು ಯಾವುದೇ ವಾಸ್ತವಿಕ ಆಧಾರವನ್ನು ಹೊಂದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಇದರಿಂದ ಅರವಿಂದ್ ಕೇಜ್ರಿವಾಲ್ಗೆ ಹಿನ್ನಡೆಯಾಗಿದ್ದು, ಮದ್ಯ ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕೆಂಬ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ತಿರಸ್ಕರಿಸಿದ್ದಾರೆ.
ಪ್ರಕರಣದಿಂದ ತಾವು ಹಿಂದೆ ಸರಿಯಲು ಅರವಿಂದ್ ಕೇಜ್ರಿವಾಲ್ ಅವರ ಭ್ರಮೆಗಳು ಕಾರಣವಾಗುವುದಿಲ್ಲ ಎಂದು ಹೇಳುವ ಮೂಲಕ ದೆಹಲಿ ಮದ್ಯ ನೀತಿ ಪ್ರಕರಣದಿಂದ ಹಿಂದೆ ಸರಿಯುವಂತೆ ಕೋರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ತಿರಸ್ಕರಿಸಿದರು.
ಪುರಾವೆಗಳಿಲ್ಲ
ಅವರ ವಾದಗಳಲ್ಲಿ ಯಾವುದೇ ಪುರಾವೆಗಳಿಲ್ಲ. ನನ್ನ ಪ್ರಮಾಣವಚನ ಸಂವಿಧಾನಕ್ಕೆ ಬದ್ಧವಾಗಿರುವುದರಿಂದ ನಾನು ಈ ಅರ್ಜಿಯನ್ನು ತಿರಸ್ಕರಿಸುತ್ತೇನೆ. ಅವರ ಕೇಸಿನ ವಿಚಾರಣೆಯಿಂದ ನಾನು ಹಿಂದೆ ಸರಿಯುವುದಿಲ್ಲ ಎಂದು ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಘೋಷಿಸಿದ್ದಾರೆ.
ಪೀಠ ಹೇಳಿದ್ದೇನು?
ತಮ್ಮ ನಿಷ್ಪಕ್ಷಪಾತತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿದೆ. ಕಾರ್ಯಕ್ರಮಗಳು ರಾಜಕೀಯವಲ್ಲ. ಕಾನೂನು ವಿಷಯಗಳ ಕುರಿತು ಮಾತನಾಡಲು ಭಾಷಣಕಾರರನ್ನು ಆಹ್ವಾನಿಸಲಾಗಿತ್ತು. ಅದರಲ್ಲಿ ನಾನು ಪಾಲ್ಗೊಂಡಿದ್ದೆ ಅಷ್ಟೇ. ನಮ್ಮನ್ನು ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ.
ಈ ಸಂವಾದದಲ್ಲಿ ಯಾವುದೇ ರಾಜಕೀಯ ಸಿದ್ಧಾಂತಕ್ಕೆ ಅವಕಾಶವಿರುವುದಿಲ್ಲ. ಬಾರ್ ಮತ್ತು ಬೆಂಚ್ ನಡುವಿನ ಸಂಬಂಧವು ನ್ಯಾಯಾಲಯದ ಕೊಠಡಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಬಾರ್ ಅಸೋಸಿಯೇಷನ್ಗಳು ಕಾರ್ಯಗಳನ್ನು ಆಯೋಜಿಸುವುದು ಅಸಾಮಾನ್ಯವೇನಲ್ಲ.
ಅದರಲ್ಲಿ ಭಾಗಿಯಾಗಿದ್ದೇವೆ ಎಂದ ಮಾತ್ರಕ್ಕೆ ಪಕ್ಷಪಾತ ಮಾಡುತ್ತಿದ್ದೇವೆ ಎಂದರ್ಥವಲ್ಲ. ಹೀಗಾಗಿ ನಾನು ಈ ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ. ಈ ಪ್ರಕರಣವನ್ನು ನಾನು ವಿಚಾರಣೆ ನಡೆಸುತ್ತೇನೆ ಎಂದು ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಹೇಳಿದ್ದಾರೆ.
ವಿಚಾರಣೆ ಮುಂದುವರಿಕೆ
ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಇಂದು ಕೇಜ್ರಿವಾಲ್ ಸಲ್ಲಿಸಿದ್ದ 'ಹಿಂದೆ ಸರಿಯುವ' ಅರ್ಜಿಯನ್ನು ವಜಾಗೊಳಿಸಿರುವುದರಿಂದ, ಅವರು ಈಗ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಂದುವರಿಸಲಿದ್ದಾರೆ. ಸಿಬಿಐ ಅರ್ಜಿಯ ಕುರಿತು ಮುಂದಿನ ಪೂರ್ಣ ಪ್ರಮಾಣದ ವಿಚಾರಣೆಯ ದಿನಾಂಕವು ಸದ್ಯದಲ್ಲೇ ಪ್ರಕಟವಾಗುವ ಸಾಧ್ಯತೆಯಿದೆ.
ಕೇಜ್ರಿವಾಲ್ ಅವರು ಈಗಾಗಲೇ 2024ರ ಸೆಪ್ಟೆಂಬರ್ನಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದಿದ್ದಾರೆ. ಪ್ರಸ್ತುತ ಹೈಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಯು ಸಿಬಿಐನ ಅರ್ಜಿಯ ಮೇಲೆ ಕೇಂದ್ರೀಕೃತವಾಗಿದ್ದು, ಇದು ಪ್ರಕರಣದ ಮುಂದಿನ ದಿಕ್ಕನ್ನು ನಿರ್ಧರಿಸಲಿದೆ.