ನವದೆಹಲಿ: ಬೆದರಿಕೆ ಮತ್ತು ದಮನಕಾರಿ ರಾಜಕಾರಣದ ವಿರುದ್ಧ ಅಂತಿಮವಾಗಿ ನ್ಯಾಯವೇ ಗೆಲ್ಲಲಿದೆ ಎಂಬ ಕಾಂಗ್ರೆಸ್ ವಿಶ್ವಾಸ ವ್ಯಕ್ತಪಡಿಸಿದ್ದು, ತನ್ನ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಮಾತನಾಡಿ, ‘ಕಾಂಗ್ರೆಸ್ ಪಕ್ಷವು ಪವನ್ ಖೇರಾ ಅವರೊಂದಿಗೆ ದೃಢವಾಗಿ ನಿಂತಿದೆ. ಗುವಾಹಟಿ ಹೈಕೋರ್ಟ್ನ ತೀರ್ಪನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಮುಂದುವರೆದು, ಬೆದರಿಕೆ, ದಮನ ಮತ್ತು ಕಿರುಕುಳದ ರಾಜಕಾರಣದ ವಿರುದ್ಧ ನ್ಯಾಯವೇ ಗೆಲ್ಲಲಿದೆ ಎಂಬ ಭರವಸೆ ನಮಗಿದೆ’ ಎಂದು ತಿಳಿಸಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿಯ ಬಳಿ ಹಲವು ಪಾಸ್ಪೋರ್ಟ್ಗಳಿದ್ದು, ವಿದೇಶದಲ್ಲಿ ಆಸ್ತಿ ಕೂಡ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಪವನ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು.
ಖೇರಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಿಮಂತ್ ಬಿಸ್ವಾ ಶರ್ಮಾ ಅವರ ಪತ್ನಿ ಬಳಿ ಹಲವಾರು ಪಾಸ್ಪೋರ್ಟ್ಗಳಿದ್ದು, ವಿದೇಶದಲ್ಲಿ ಆಸ್ತಿ ಹೊಂದಿದ್ದಾರೆಂದು ಆರೋಪಿಸಿದ್ದರು.
ಇದರ ಬೆನ್ನಲ್ಲೇ ರಿನಿಕಿ ಭುಯಾನ್ ಶರ್ಮಾ ಅವರು ಗುವಾಹಟಿ ಕ್ರೈಂ ಬ್ರಾಂಚ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ, ಪವನ್ ಖೇರಾ ಸೋಮವಾರ ಗುವಾಹಟಿ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು,
ಶುಕ್ರವಾರ ನ್ಯಾಯಮೂರ್ತಿ ಪಾರ್ಥಿವ್ ಜ್ಯೋತಿ ಸೈಕಿಯಾ ಅವರ ಏಕ ಪೀಠವು ಅದನ್ನು ತಿರಸ್ಕರಿಸಿದೆ. ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹಲವಾರು ಪ್ರಮುಖ ಅವಲೋಕನಗಳನ್ನು ಮಾಡಿದೆ.