ನಾಸಿಕ್: ನಾಸಿಕ್ನಲ್ಲಿ ಜ್ಯೋತಿಷ್ಯದ ಹೆಸರಿನಲ್ಲಿ 150ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿ ಜೈಲು ಪಾಲಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಗೆ ಭಾನುವಾರ ನಾಸಿಕ್ ನ್ಯಾಯಾಲಯ ಮೇ 9 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸ್ವಯಂ ಘೋಷಿತ ದೇವಮಾನವ, ಜ್ಯೋತಿಷಿ ಅಶೋಕ್ ಖರತ್ ವಿರುದ್ಧ ದಾಖಲಾಗಿರುವ ಆರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ಆರನೇ ಪ್ರಕರಣದಲ್ಲಿ, ತನ್ನ ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ ಕೋರಿ ತನ್ನನ್ನು ಸಂಪರ್ಕಿಸಿದ್ದ ಯುವತಿಯನ್ನು ಅಶೋಕ್ ಖರತ್ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಖರತ್ ಮಹಿಳೆಗೆ ಬೆದರಿಕೆ ಹಾಕಿದ್ದಾನೆ. ಆಕೆಯ ಕುಟುಂಬವನ್ನು ನಾಶಮಾಡಲು ತನ್ನ "ದೈವಿಕ ಶಕ್ತಿಗಳನ್ನು" ಬಳಸುವುದಾಗಿ ಹೆದರಿಸಿದ್ದಾನೆ. ಆಧಾರ್, ಪ್ಯಾನ್ ಕಾರ್ಡ್ ಮತ್ತು ಆಕೆಯ ಕುಟುಂಬ ಸದಸ್ಯರ ಇತರ ದಾಖಲೆಗಳನ್ನು ಸಹ ಅವನು ತೆಗೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಸಿಕ್ ಮತ್ತು ಅಹಲ್ಯಾನಗರ ಜಿಲ್ಲೆಗಳಲ್ಲಿ ಖರತ್ ವಿರುದ್ಧ ದಾಖಲಾಗಿರುವ 12 ಲೈಂಗಿಕ ದೌರ್ಜನ್ಯ ಮತ್ತು ಆರ್ಥಿಕ ವಂಚನೆ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(SIT), ಆರನೇ ಪ್ರಕರಣದಲ್ಲಿ ಆರೋಪಿಯನ್ನು ತನ್ನ ಕಸ್ಟಡಿಗೆ ನೀಡುವಂತೆ ಕೋರಿ ಗುರುವಾರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
ನ್ಯಾಯಾಲಯ ಅನುಮತಿ ನೀಡುತ್ತಿದ್ದಂತೆ, ಶುಕ್ರವಾರ ಆರನೇ ಪ್ರಕರಣದಲ್ಲಿ ಎಸ್ಐಟಿ, ಖರತ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಪೊಲೀಸ್ ಕಸ್ಟಡಿ ಮುಗಿದ ನಂತರ ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿತು.
ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವನ ವಿರುದ್ಧ ಸುಲಿಗೆ, ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರಿಗೆ ವಂಚನೆ, ಮಾದಕವಸ್ತು ಬಳಕೆ ಸೇರಿದಂತೆ ಇತರ ಆರೋಪಗಳ ಮೇಲೆ ನಾಸಿಕ್ ಪೊಲೀಸರು ದಾಖಲಿಸಿದ ಎಫ್ಐಆರ್ ಅನ್ನು ಗಮನದಲ್ಲಿಟ್ಟುಕೊಂಡು, ಏಪ್ರಿಲ್ 6 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಖರತ್ ವಿರುದ್ಧ ಇಡಿ ಕ್ರಿಮಿನಲ್ ಮೊಕದ್ದಮೆ ಸಹ ದಾಖಲಿಸಿದೆ.
ಹಲವು ವರ್ಷಗಳಿಂದ ಮಹಾರಾಷ್ಟ್ರದ ಹಲವಾರು ಪ್ರಮುಖ ರಾಜಕಾರಣಿಗಳು ಸೇರಿದಂತೆ ನೂರಾರು ಮಹಿಳೆಯರು ಖರತ್ ಅವರನ್ನು ಭೇಟಿ ಮಾಡಿದ್ದು, ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮೂರು ವರ್ಷಗಳ ಕಾಲ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ ನಂತರ ಮಾರ್ಚ್ 18 ರಂದು ಅಶೋಕ್ ಖರತ್ ಅವರನ್ನು ಬಂಧಿಸಲಾಗಿದೆ.