ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಕೇವಲ ಮೂರು ವರ್ಷಗಳ ಹಿಂದಷ್ಟೇ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಬಿದ್ದಿದ್ದು, ಹಲವಾರು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಬಂಡಿಯಾ ನದಿಯ ಮೇಲಿನ ಕೋಥಿ-ಕೊರನಾರ್ ಸೇತುವೆಯನ್ನು ಆಗಸ್ಟ್ 15, 2023 ರಂದು ಆಗಿನ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉದ್ಘಾಟಿಸಿದ್ದರು. ಅವರು ಗಡ್ಚಿರೋಲಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದರು.
7.5 ಮೀಟರ್ ಅಗಲದ 105 ಮೀಟರ್ ಓವರ್ಪಾಸ್ನ ಮಧ್ಯದ ಭಾಗವು ಜುಲೈ 31 ರಂದು ಕುಸಿದು ಬಿದ್ದಿದ್ದು, ಮಹಾರಾಷ್ಟ್ರ-ಛತ್ತೀಸ್ಗಢ ಗಡಿಯಲ್ಲಿರುವ ಹಲವಾರು ಹಳ್ಳಿಗಳಿಗೆ ಸಂಪರ್ಕ ಕಡಿತಗೊಂಡಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಮತ್ತು ಎನ್ಸಿಪಿ(ಎಸ್ಪಿ) ಯ ರೋಹಿತ್ ಪವಾರ್ ಸೇರಿದಂತೆ ಅನೇಕ ರಾಜಕಾರಣಿಗಳು ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಳಪೆ ಕಾಮಗಾರಿಗೆ ಕಾರಣರಾದ ಸಾರ್ವಜನಿಕ ಕಲ್ಯಾಣ ಇಲಾಖೆ(ಪಿಡಬ್ಲ್ಯೂಡಿ) ಅಧಿಕಾರಿಗಳು ಹಾಗೂ ಸೇತುವೆಯ ನಿರ್ಮಾಣದಲ್ಲಿ ಭಾಗಿಯಾಗಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿ ಅವಿಶಾಂತ್ ಪಾಂಡಾ ಅವರು ಇಷ್ಟು ಕಡಿಮೆ ಅವಧಿಯಲ್ಲಿ ಸೇತುವೆ ಕುಸಿತವಾಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.
"ಈ ವಿಷಯದ ಬಗ್ಗೆ ತಕ್ಷಣದ ತಾಂತ್ರಿಕ ತನಿಖೆ ನಡೆಸುವಂತೆ ಪಿಡಬ್ಲ್ಯೂಡಿ ಸೂಪರಿಂಟೆಂಡಿಂಗ್ ಎಂಜಿನಿಯರ್ಗೆ ನಿರ್ದೇಶನ ನೀಡಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಕಲೆಕ್ಟರ್ ತಿಳಿಸಿದ್ದಾರೆ.