ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಧಿಕೃತ ಕಾರ್ಯಕ್ರಮಕ್ಕೆ ಸತತ ಎರಡನೇ ವರ್ಷವೂ ಗೈರಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು, ಅವರ ಮನಸ್ಥಿತಿಯು 'ದಿಮಾಗಿ ನಕ್ಸಲ್' ವ್ಯವಸ್ಥೆಯ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಶನಿವಾರ ಹೇಳಿದೆ.
ಈ ಕಾರ್ಯಕ್ರಮದಲ್ಲಿ ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಸ್. ಜೈಶಂಕರ್ ಸೇರಿದಂತೆ ಪ್ರಮುಖ ಕೇಂದ್ರ ಸಚಿವರು; ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಪ್ರಧಾನ ಮಂತ್ರಿಯವರ ಪ್ರಧಾನ ಕಾರ್ಯದರ್ಶಿಗಳಾದ ಪಿಕೆ ಮಿಶ್ರಾ ಮತ್ತು ಶಕ್ತಿಕಾಂತ ದಾಸ್ ಉಪಸ್ಥಿತರಿದ್ದರು.
ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, 'ರಾಹುಲ್ ಗಾಂಧಿ ಕೆಂಪು ಕೋಟೆಯಲ್ಲಿನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಯಾವುದೇ ದೇಶಭಕ್ತರಾಗಿರುವ ವಿರೋಧ ಪಕ್ಷದ ನಾಯಕ ಅಥವಾ ಸಾರ್ವಜನಿಕ ಹುದ್ದೆಯಲ್ಲಿರುವ ವ್ಯಕ್ತಿಯು ಇಂತಹ ಕೃತ್ಯವನ್ನು ಸ್ವಯಂಪ್ರೇರಿತವಾಗಿ ಎಸಗಲು ಸಾಧ್ಯವೇ?' ಎಂದು ಪ್ರಶ್ನಿಸಿರುವ ಅವರು, ಕಾರ್ಯಕ್ರಮಕ್ಕೆ ಗೈರಾಗುವ ರಾಹುಲ್ ಗಾಂಧಿಯವರ ನಿರ್ಧಾರವು 'ವಂದೇ ಮಾತರಂ' ಮೇಲಿರುವ ಅವರ ದ್ವೇಷವನ್ನು ಪ್ರತಿಬಿಂಬಿಸುತ್ತದೆ' ಎಂದು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ನಲ್ಲಿ ಆರೋಪಿಸಿದ್ದಾರೆ.
'ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಲು ಅನರ್ಹರು. ಅವರ ಮನಸ್ಥಿತಿಯು 'ಅಸ್ವಸ್ಥ ನಕ್ಸಲ್' (Dimagi Naxal) ವ್ಯವಸ್ಥೆಯ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ!' ಎಂದು ಭಂಡಾರಿ ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಅಧಿಕೃತ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸತತ ಎರಡನೇ ಬಾರಿಗೆ ಗೈರಾಗಿದ್ದಾರೆ.