ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಉಪ ಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿದ್ದ ಅಸೀಶ್ ಬ್ಯಾನರ್ಜಿ ಪಕ್ಷದ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಅಸೀಶ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ನಿಕಟವರ್ತಿ ಹಾಗೂ ಆಪ್ತರಾಗಿದ್ದರು. ಸುದೀರ್ಘ ಕಾಲದಿಂದ ತೃಣಮೂಲ ಕಾಂಗ್ರೆಸ್ನಲ್ಲಿ ಸಕ್ರಿಯರಾಗಿದ್ದ ಅವರು, ಪಕ್ಷದ ಸಂಘಟನೆ ಹಾಗೂ ಪಶ್ಚಿಮ ಬಂಗಾಳ ವಿಧಾನಸಭಾ ಕಾರ್ಯಕಲಾಪಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಹಾಗೂ ಹಿರಿಯ ರಾಜಕೀಯ ನಾಯಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶವವನ್ನು ವಶಕ್ಕೆ ಪಡೆದಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿಯಲಿದೆ.
ಈ ಸುದ್ದಿ ಹರಡುತ್ತಿದ್ದಂತೆಯೇ ಟಿಎಂಸಿ ನಾಯಕರು ಮತ್ತು ಕಾರ್ಯಕರ್ತರು ತೀವ್ರ ಕಂಬನಿ ಮಿಡಿದಿದ್ದಾರೆ. ಅಸೀಶ್ ಬ್ಯಾನರ್ಜಿ ಅವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.