ನವದೆಹಲಿ/ಚಂಡೀಗಢ: ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪತ್ನಿ ಡಾ. ಗುರುಪ್ರೀತ್ ಕೌರ್ ಅವರು 5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಪಂಜಾಬ್ ಸಿಎಂ ಪತ್ನಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC)ಕ್ಕೆ ದೂರು ನೀಡಲಾಗಿದೆ. ದೂರಿನ ಮೇರೆಗೆ ಪಂಜಾಬ್ ಸರ್ಕಾರ ಮತ್ತು ಪೊಲೀಸ್ ಇಲಾಖೆ ಮುಖ್ಯಸ್ಥರಿಗೆ ಎನ್ಎಚ್ಆರ್ಸಿ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಭಗವಂತ್ ಮಾನ್ ಪತ್ನಿ ವಿರುದ್ಧದ ಆರೋಪದ ಬಗ್ಗೆ ತನಿಖೆ ನಡೆಸಿ ಎರಡು ವಾರಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಎನ್ಎಚ್ಆರ್ಸಿ ನಿರ್ದೇಶಿಸಿದೆ.
"ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಪಂಜಾಬ್ ಮುಖ್ಯಮಂತ್ರಿಯ ಪತ್ನಿ ಗುರುಪ್ರೀತ್ ಕೌರ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ನಿವೃತ್ತ ನ್ಯಾಯಾಧೀಶರೊಬ್ಬರು ಸಾರ್ವಜನಿಕವಾಗಿ ಹೇಳಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ".
ಮುಖ್ಯಮಂತ್ರಿ ಮಾನ್ ಅವರ ಪತ್ನಿ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು 5 ಕೋಟಿ ರೂ.ಗಳ ಬೇಡಿಕೆ ಇಟ್ಟಿದ್ದಾರೆ ಎಂಬ ದೂರುದಾರರ ಆರೋಪವನ್ನು ಆಯೋಗವು ಗಮನಕ್ಕೆ ತೆಗೆದುಕೊಂಡಿದೆ ಎಂದು NHRC ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನಿವೃತ ನ್ಯಾಯಾಧೀಶರು ಈ ಆರೋಪ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
NHRC ನೋಟಿಸ್ ನಂತರ, ಮಾನ್ ಅವರ ಪತ್ನಿ ಗುರುಪ್ರೀತ್ ಕೌರ್ ಅವರು ಶನಿವಾರ, ತಮ್ಮ ಗಂಭೀರ ಆರೋಪ ಮಾಡಿದ ನಿವೃತ್ತ ನ್ಯಾಯಾಧೀಶರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಇನ್ನು ವಿರೋಧ ಪಕ್ಷದ ನಾಯಕರು ಈ ವಿಷಯದ ಬಗ್ಗೆ ಮುಖ್ಯಮಂತ್ರಿಯಿಂದ ಸ್ಪಷ್ಟೀಕರಣ ಕೇಳಿದ್ದಾರೆ.