ನವದೆಹಲಿ: ಜುಲೈ 25 ರಂದು ಕೇಂದ್ರ ಸರ್ಕಾರವು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಸೋಮವಾರ ಘೋಷಿಸಿದೆ.
ಈ ಹಿಂದೆ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ 36 ದಿನಗಳ ಕಾಲ ಉಗ್ರ ಪ್ರತಿಭಟನೆ ನಡೆಸಿದ್ದ ಸಿಜೆಪಿ, ಇದೀಗ ಮತ್ತೊಂದು ದೊಡ್ಡ ಹೋರಾಟಕ್ಕೆ ಸಿದ್ಧವಾಗಿದೆ.
ಶಿಕ್ಷಕರ ದಿನಾಚರಣೆಯಂದೇ ನಿಗದಿಯಾಗಿರುವ ಈ ಪ್ರತಿಭಟನಾ ಮೆರವಣಿಗೆ ಇಂಡಿಯಾ ಗೇಟ್ನಲ್ಲಿ ಆರಂಭವಾಗಿ, ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಕಡೆಗೆ ಸಾಗಲಿದೆ ಎಂದು ಸಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ನೀಟ್ ಪರೀಕ್ಷೆ ರದ್ದತಿ ಮತ್ತು ಮರು ಪರೀಕ್ಷೆಯ ನಂತರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳು ಮತ್ತು ಜುಲೈನಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳ ನೇತೃತ್ವದಲ್ಲಿ ಈ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಸಿಜೆಪಿ ತಿಳಿಸಿದೆ.
ಇಂದು ನಡೆದ ಸಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
"ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ತಪ್ಪಾಗಿ ಭಾವಿಸಲು ಸಾಧ್ಯವಿಲ್ಲ. ನಮ್ಮ ಉತ್ತಮ ನಂಬಿಕೆಯು ಈ ದೇಶದ ಯುವಜನರಿಗೆ ದ್ರೋಹ ಮಾಡಲು ಸರ್ಕಾರಕ್ಕೆ ಅವಕಾಶ ನೀಡುವುದಿಲ್ಲ" ಎಂದು ಸಿಜೆಪಿ ಹೇಳಿದೆ.
ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳು ಮತ್ತು ನೀಟ್ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಜೂನ್ 20 ರಂದು ಜಂತರ್ ಮಂತರ್ನಲ್ಲಿ ಸಿಜೆಪಿ ತನ್ನ ಪ್ರತಿಭಟನೆಯನ್ನು ಆರಂಭಿಸಿತು. ಪ್ರತಿಭಟನೆಯು ನಂತರ ದೇಶದ ಇತರ ಭಾಗಗಳಿಗೆ ಹರಡಿತು.
ಜುಲೈ 25 ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ ಮತ್ತು ಸರ್ಕಾರ, ಸಿಜೆಪಿ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ನಂತರ, ಆತ್ಮಹತ್ಯೆ ಮಾಡಿಕೊಂಡ ನೀಟ್ ಆಕಾಂಕ್ಷಿಗಳ ಕುಟುಂಬಗಳಿಗೆ ಪರಿಹಾರ ಹಾಗೂ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಸಂಘಟನೆಯ ಹಲವಾರು ಬೇಡಿಕೆಗಳಿಗೆ ಒಪ್ಪಿಕೊಂಡ ನಂತರ ಪ್ರತಿಭಟನೆಯನ್ನು ಕೈಬಿಡಲಾಗಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ನಮಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಮತ್ತೆ ಪ್ರತಿಭಟನೆಗೆ ಮುಂದಾಗಿದೆ.