ನವದೆಹಲಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತರುಣ್ ತೇಜ್ಪಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ದೊಡ್ಡ ಹಿನ್ನಡೆ ನೀಡಿದೆ.
ಬಾಂಬೆ ಹೈಕೋರ್ಟ್ ವಿಧಿಸಿರುವ 10 ವರ್ಷಗಳ ಜೈಲು ಶಿಕ್ಷೆಯಿಂದ ಸದ್ಯಕ್ಕೆ ಶರಣಾಗುವುದಕ್ಕೆ ವಿನಾಯಿತಿ ನೀಡುವಂತೆ ತೇಜ್ಪಾಲ್ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿರುವ ನ್ಯಾಯಾಲಯ, ಎರಡು ವಾರಗಳೊಳಗೆ ಶರಣಾಗುವಂತೆ ಖಡಕ್ ಸೂಚನೆ ನೀಡಿದೆ.
ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ಪೀಠವು ತರುಣ್ ತೇಜ್ಪಾಲ್ ಅವರು ಎರಡು ವಾರಗಳೊಳಗೆ ಶರಣಾಗಬೇಕು ಎಂದು ನಿರ್ದೇಶಿಸಿದೆ.
ಇದೇ ವೇಳೆ, ತಮ್ಮ ವಿರುದ್ಧದ ಅಪರಾಧ ನಿರ್ಣಯ ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಸೆಪ್ಟೆಂಬರ್ 22ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಆದರೆ, ಶರಣಾಗತಿ ಪ್ರಮಾಣಪತ್ರ ಸಲ್ಲಿಸಿದ ಬಳಿಕವೇ ಈ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಆಗಸ್ಟ್ 6ರಂದು ಬಾಂಬೆ ಹೈಕೋರ್ಟ್ ತರುಣ್ ತೇಜ್ಪಾಲ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. ಐದು ವರ್ಷಗಳ ಹಿಂದೆ ವಿಚಾರಣಾ ನ್ಯಾಯಾಲಯ ನೀಡಿದ್ದ ಖುಲಾಸೆ ತೀರ್ಪನ್ನು ಹೈಕೋರ್ಟ್ ತಿರಸ್ಕರಿಸಿತ್ತು.
2013 ರಲ್ಲಿ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರ ಸಂದರ್ಭದಲ್ಲಿ, ಹೋಟೆಲ್ ಲಿಫ್ಟ್ನಲ್ಲಿ ತಮ್ಮದೇ ಸಂಸ್ಥೆಯ ಕಿರಿಯ ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪ ತರುಣ್ ತೇಜ್ಪಾಲ್ ಮೇಲಿತ್ತು.
2021 ರಲ್ಲಿ ಗೋವಾದ ಮಾಪುಸಾ ಸೆಷನ್ಸ್ ನ್ಯಾಯಾಲಯ ಇವರನ್ನು ಖುಲಾಸೆಗೊಳಿಸಿತ್ತು. ಆದರೆ, ಈ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಇತ್ತೀಚೆಗೆ, ಅಂದರೆ ಆಗಸ್ಟ್ 6, 2026 ರಂದು ಬಾಂಬೆ ಹೈಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿ, ತೇಜ್ಪಾಲ್ ದೋಷಿ ಎಂದು ಘೋಷಿಸಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.