ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಂಗಾ ನದಿಯ ದಡದಲ್ಲಿ ಗುರುವಾರ ತರಬೇತಿ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಕರ್ನಾಟಕ ಮೂಲದ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾರ್ಗ್ ಏವಿಯೇಷನ್ ನಿರ್ವಹಿಸುತ್ತಿದ್ದ ಟೆಕ್ನಮ್ ವಿಮಾನವು ಇಂದು ಬೆಳಗ್ಗೆ 11.30 ರ ಸುಮಾರಿಗೆ ಟೇಕ್ ಆಫ್ ಆಗಿ ಸುಮಾರು 20 ನಿಮಿಷಗಳ ನಂತರ ಕತ್ರಿ ಪ್ರದೇಶದ ನಾಥಪೂರ್ವ ಗ್ರಾಮದ ಬಳಿ ಪತನಗೊಂಡಿದೆ ಎಂದು ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಅಪಘಾತದಲ್ಲಿ ತರಬೇತುದಾರರಾಗಿದ್ದ ಗುಜರಾತ್ ಮೂಲದ ಸಚಿನ್ ಭಾಟಿಯಾ ಮತ್ತು ತರಬೇತಿ ಪಡೆಯುತ್ತಿದ್ದ ಕರ್ನಾಟಕದ ಅಭಿಷೇಕ್ ಪೂಜಾರಿ ಅವರು ಮೃತ ದುರ್ದೈವಿಗಳಾಗಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಪೊಲೀಸ್ ಆಯುಕ್ತ ರಘುವೀರ್ ಲಾಲ್, ಜೆಸಿಪಿ ಸಂಕಲ್ಪ್ ಶರ್ಮಾ ಮತ್ತು ಕೇಂದ್ರ ಡಿಸಿಪಿ ಅತುಲ್ ಶ್ರೀವಾಸ್ತವ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು.
ನಾಲ್ಕು ಆಸನಗಳ ವಿಮಾನ ಇದಾಗಿದ್ದು, ಇಬ್ಬರು ಸಿಬ್ಬಂದಿ ಗಾರ್ಗ್ ಏವಿಯೇಷನ್ ಟ್ರೈನಿಂಗ್ ಸೆಂಟರ್ನಿಂದ ಟೆಕ್ನಾಮ್ ವಿಮಾನದಲ್ಲಿ ಹಾರಾಟ ಆರಂಭಿಸಿದ್ದರು. ಇವರಿಬ್ಬರೂ ಒಟ್ಟಾರೆಯಾಗಿ 3,000 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದರು. ವಿಮಾನ ಪತನಕ್ಕೆ ಕಾರಣ ಏನು ಎಂಬ ಬಗ್ಗೆ ಹೆಚ್ಚಿನ ತಾಂತ್ರಿಕ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ರಘುವೀರ್ ಲಾಲ್ ಅವರು ತಿಳಿಸಿದ್ದಾರೆ.
ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ ವಿಮಾನ ಅಪಘಾತ ತನಿಖಾ ಬ್ಯೂರೋ(ಎಎಐಬಿ) ಅಪಘಾತದ ತನಿಖೆ ನಡೆಸುತ್ತದೆ.
ಅಪಘಾತದ ಸ್ಥಳದಲ್ಲಿ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಯಾವುದಾದರೂ ವಸ್ತುವಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದಾಗ್ಯೂ ತನಿಖೆ ಪೂರ್ಣಗೊಂಡ ನಂತರವಷ್ಟೇ ಘಟನೆಯ ಸಂಪೂರ್ಣ ವಿವರಗಳು ತಿಳಿದು ಬರಲಿವೆ.