ನವದೆಹಲಿ: ನಾಡಗೀತೆ 'ಜಯಭಾರತ ಜನನಿಯ ತನುಜಾತೆ'ಯ ಗಾಯನಕ್ಕೆ ನಿರ್ದಿಷ್ಟ ಧಾಟಿ ಮತ್ತು ಅವಧಿಯನ್ನು ನಿಗದಿಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದ್ದ ಕರ್ನಾಟಕ ಹೈಕೋರ್ಟ್ನ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂರ್ಣಪಾಠ ಬಳಸಬೇಕು ಹಾಗೂ ಆಲಾಪವಿಲ್ಲದೆ, ಪುನರಾವರ್ತನೆ ಇಲ್ಲದೆ 2 ನಿಮಿಷ 30 ಸೆಕೆಂಡುಗಳ ಅವಧಿಯಲ್ಲಿ ಹಾಡಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳ್ಳಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಿಕ್ಕೇರಿ ಕೃಷ್ಣಮೂರ್ತಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠವು ವಜಾಗೊಳಿಸಿತು.
ನಾಡಗೀತೆಯ ಧಾಟಿ ಮತ್ತು ಹಾಡಿನ ಅವಧಿ ಎರಡರಲ್ಲೂ ಏಕರೂಪತೆ ಅಗತ್ಯ ಎಂದು ಪೀಠವು ಅಭಿಪ್ರಾಯಪಟ್ಟಿತು. ಇಂತಹ ಸನ್ನಿವೇಶದಲ್ಲಿ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಕಾರಣ ಸಿಗುತ್ತಿಲ್ಲ ಎಂದು ನ್ಯಾಯಪೀಠ ಹೇಳಿತು.
ಕೃಷ್ಣಮೂರ್ತಿ ಪರವಾಗಿ ಹಿರಿಯ ವಕೀಲ ಮೋಹನ್ ವಿ. ಕತಾರ್ಕಿ ವಾದ ಮಂಡಿಸಿದರು. ತಜ್ಞರಿಂದ ಸಂಯೋಜಿಸಲ್ಪಟ್ಟಿರುವ ನಾಡಗೀತೆಗೆ ಧಾಟಿಯನ್ನು ನಿಗದಿಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಪ್ರತಿಪಾದಿಸಿತ್ತು. ಅಲ್ಲದೆ, ಸರ್ಕಾರದ ನಿರ್ಧಾರ ಅರ್ಜಿದಾರರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂಬ ವಾದವನ್ನೂ ಅದು ತಿರಸ್ಕರಿಸಿತ್ತು.
ಈ ಹಿಂದೆ ನಾಡಗೀತೆಯನ್ನು ಯಾವ ರಾಗದಲ್ಲಿ ಹಾಡಬೇಕು ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸಲು ಸಾಧ್ಯವಿಲ್ಲ ಎಂಬ ಕೃಷ್ಣಮೂರ್ತಿ ಅವರ ವಾದವನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಆ ವಾದವು ಸಮರ್ಥನೀಯವಲ್ಲ ಎಂದು ಹೇಳಿತ್ತು.