ನವದೆಹಲಿ: ಉತ್ತರಖಂಡದ ಹಲ್ದ್ವಾನಿಯಲ್ಲಿ ನಡೆದ ಧಾರ್ಮಿಕ ಆಚರಣೆಗೆ ಜಾತಿಯ ಬಣ್ಣ ಹಚ್ಚಿ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ ಎಂಬ ದೂರಿನ ಮೇರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಹಲ್ದ್ವಾನಿಯ ವಾಲ್ಮೀಕಿ ಸಮುದಾಯದ ಸದಸ್ಯ, ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್ನ ಕಾರ್ಯಕರ್ತ ಅಮಿತ್ ಕುಮಾರ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್ 29ರಂದು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳು ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನಾನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವನಾಗಿದ್ದು, ಆಗಸ್ಟ್ 11ರಂದು ನಡೆದ ಶುದ್ಧೀಕರಣ ಯಜ್ಞದಲ್ಲಿ ಭಾಗವಹಿಸಿದ್ದೆ. ನಾನು ಮಾತ್ರವಲ್ಲ ಪರಿಶಿಷ್ಟ ಜಾತಿಗಳು ಸೇರಿದಂತೆ ವಿವಿಧ ಸಮುದಾಯಗಳ ಜನರು ಈ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ಯಜ್ಞಕ್ಕೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜಾತಿಗೂ ಯಾವುದೇ ಸಂಬಂಧ ಇರಲಿಲ್ಲ ಎಂದು ಅಮಿತ್ ಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.
ಆಗಸ್ಟ್ 8ರಂದು ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದರು.
ಆಗಸ್ಟ್ 11ರಂದು ಅದೇ ಸ್ಥಳದಲ್ಲಿ ಶುದ್ಧೀಕರಣ ಯಜ್ಞ ನಡೆದಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ವಿಚಾರವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದ ಖರ್ಗೆ, ಅಸ್ಪಶ್ಯತೆ ಮನೋಭಾವ ಇನ್ನೂ ಸಮಾಜದಲ್ಲಿ ಜೀವಂತವಾಗಿರುವುದು ನೋವಿನ ಸಂಗತಿ ಎಂದು ಹೇಳಿದ್ದರು.
ಈ ಬೆಳವಣಿಗೆ ಕುರಿತು ಶನಿವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ, ಶುದ್ಧೀಕರಣ ಯಜ್ಞವನ್ನು ತೀವ್ರವಾಗಿ ಖಂಡಿಸಿದ್ದರು. ಅಲ್ಲದೆ, ಕಾರ್ಯಕ್ರಮದ ಬಳಿಕ ಶುದ್ಧೀಕರಣ ನಡೆಸಿದವರ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದರು. ಶುದ್ಧೀಕರಣದ ಘಟನೆ ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ತಾವು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿದ್ದು, ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡಿದ್ದವರನ್ನು ಅಸ್ಪೃಶ್ಯತೆ ಆಚರಿಸುವವರು ಹಾಗೂ ದಲಿತ ವಿರೋಧಿಗಳು ಎಂದು ರಾಹುಲ್ ಗಾಂಧಿ ಬಿಂಬಿಸಿದ್ದಾರೆ ಎಂದು ಅಮಿತ್ ಕುಮಾರ್ ಆರೋಪಿಸಿದ್ದಾರೆ.