ನವದೆಹಲಿ: ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣದಲ್ಲಿ ಜಲವಿವಾದ ನ್ಯಾಯಮಂಡಳಿ ಸ್ಥಾಪನೆಗೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಅಂತರರಾಜ್ಯ ಪೆನ್ನೈಯಾರ್/ದಕ್ಷಿಣ ಪಿನಾಕಿನಿ ನದಿಯಿಂದ ಹರಿಯುವ ನೀರಿನ ಹಂಚಿಕೆ ಸಂಬಂಧ ತಮಿಳುನಾಡು ಮತ್ತು ಕರ್ನಾಟಕದ ನಡುವಿನ ವಿವಾದವನ್ನು ಇತ್ಯರ್ಥಪಡಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎನ್ವಿ ಅಂಜಾರಿಯಾ ಅವರಿದ್ದ ಪೀಠವು ಒಂದು ತಿಂಗಳೊಳಗೆ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ. ಈ ಪ್ರಕರಣವು ಕನ್ನಡದಲ್ಲಿ ದಕ್ಷಿಣ ಪಿನಾಕಿನಿ ಎಂದು ಕರೆಯಲ್ಪಡುವ ಪೆನ್ನೈಯಾರ್ ನದಿಯ ನೀರಿನ ಹಂಚಿಕೆಗೆ ಸಂಬಂಧಿಸಿದ ವಿವಾದಕ್ಕೆ ಸಂಬಂಧಿಸಿದೆ.
ಈ ಹಿಂದೆ ನಡೆದ ಅರ್ಜಿ ವಿಚಾರಣೆ ವೇಳೆ ಪೀಠ ಉಭಯ ರಾಜ್ಯಗಳು ತಮ್ಮ ವಾದಗಳನ್ನು ನ್ಯಾಯಮಂಡಳಿಯಲ್ಲಿ ಮಂಡಿಸುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು. ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ.