ಕೋಲ್ಕತ್ತಾ: 236 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟರ್ಕಿಶ್ ಏರ್ಲೈನ್ಸ್ ವಿಮಾನದ ಬಲ ಎಂಜಿನ್ನಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದ ಸಿಬ್ಬಂದಿ ಬಲ ಎಂಜಿನ್ನಿಂದ ಅಸಹಜ ಸೂಚನೆಗಳನ್ನು ಪತ್ತೆಹಚ್ಚಿದ ನಂತರ ಬೆಂಕಿ ಕಾಣಸಿಕೊಂಡಿದ್ದು, ತಕ್ಷಣ ಅಂತರರಾಷ್ಟ್ರೀಯ ಸೇವೆಯನ್ನು ನಿರ್ವಹಿಸುತ್ತಿದ್ದ ವೈಡ್-ಬಾಡಿ ವಿಮಾನವು ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.
ಮುನ್ನೆಚ್ಚರಿಕೆಯಾಗಿ ರನ್ವೇ ಉದ್ದಕ್ಕೂ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳನ್ನು ನಿಯೋಜಿಸಲಾಯಿತು. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತುರ್ತು ಸಿಬ್ಬಂದಿ ಬೆಂಕಿಯನ್ನು ನಂದಿಸಿದರು ಮತ್ತು ಎಂಜಿನ್ ಸುತ್ತಲೂ ತಂಪಾಗಿಸುವ ಕಾರ್ಯಾಚರಣೆ ನಡೆಸಿದರು.
ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಪ್ರಮಾಣಿತ ಕಾರ್ಯವಿಧಾನಗಳ ಮೂಲಕ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಮತ್ತು ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ.
ಎಲ್ಲಾ ಪ್ರಯಾಣಿಕರನ್ನು ಟರ್ಮಿನಲ್ಗೆ ಕರೆದೊಯ್ಯಲಾಯಿತು ಮತ್ತು ಅವರಿಗೆ ಅಗತ್ಯ ಸಹಾಯವನ್ನು ಒದಗಿಸಲಾಯಿತು. ವಿಮಾನಯಾನ ಸಂಸ್ಥೆಯು ಅಗತ್ಯವಿರುವಲ್ಲಿ ಮುಂದಿನ ಪ್ರಯಾಣ ಮತ್ತು ವಸತಿ ವ್ಯವಸ್ಥೆಗಳನ್ನು ಮಾಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.