ಚಂಡೀಗಢ: ಮಾಜಿ ಕ್ರಿಕೆಟಿಗ ಮತ್ತು ರಾಜಕಾರಣಿ, ಮಾಜಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಪತ್ನಿ ಮಾಜಿ ಶಾಸಕಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ನಿಂದ ಉಚ್ಚಾಟನೆ ಮಾಡಲಾಗಿದೆ.
ತಮ್ಮನ್ನು ಉಚ್ಛಾಟಿಸಿದ ಬಳಿಕ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಹುಲ್ ಗಾಂಧಿ ಅವರ ಮೇಲೆ ವಾಗ್ದಾಳಿ ನಡೆಸಿದ ಕೌರ್, ಅವರನ್ನು "ಪಪ್ಪು" ಎಂದು ಕರೆದಿದ್ದಾರೆ.
ಶನಿವಾರ ಕಾಂಗ್ರೆಸ್ನ ಪಂಜಾಬ್ ವ್ಯವಹಾರಗಳ ಉಸ್ತುವಾರಿ ಮತ್ತು ಛತ್ತೀಸ್ಗಢ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು, ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ಕೌರ್ ಅವರನ್ನು ಹೊರಹಾಕಲಾಗಿದೆ ಎಂದು ಹೇಳಿದ್ದಾರೆ.
ಕೌರ್ ಅವರನ್ನು ಈ ಹಿಂದೆ ಅಮಾನತುಗೊಳಿಸಲಾಗಿದ್ದರೂ, ಪಕ್ಷವು ಈಗ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಿದೆ ಎಂದು ಬಾಘೇಲ್ ತಿಳಿಸಿದ್ದಾರೆ.
ಈ ಹಿಂದೆ “ಪಂಜಾಬ್ ಮುಖ್ಯಮಂತ್ರಿಯಾಗಲು 500 ಕೋಟಿ ರೂ. ಸೂಟ್ಕೇಸ್ ನೀಡಬೇಕು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನ ಉಚ್ಚಾಟಿಸಲಾಗಿದೆ.
ಇದರ ನಡುವೆ ನವಜೋತ್ ಸಿಂಗ್ ಸಿಧು ಹಾಗೂ ನವಜೋತ್ ಕೌರ್ ಸಿಧು ಬಿಜೆಪಿಗೆ ಸೇರಲಿದ್ದಾರೆ ಎಂಬ ಊಹಾಪೋಹಗಳಿವೆ. ಆದರೆ, ಈ ಬಗ್ಗೆ ನವಜೋತ್ ಸಿಂಗ್ ಸಿಧು ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ತಮ್ಮ ಉಚ್ಚಾಟನೆಗೆ ಪ್ರತಿಕ್ರಿಯಿಸಿದ ಕೌರ್, ರಾಹುಲ್ ಗಾಂಧಿಯವರ ನಾಯಕತ್ವವನ್ನು ಟೀಕಿಸಿದ್ದಾರೆ. ಅವರು ನೆಲದ ವಾಸ್ತವಗಳಿಂದ ಸಂಪರ್ಕ ಕಡಿತಗೊಂಡಿದ್ದಾರೆ ಎಂದು ಆರೋಪಿಸಿ ಎಕ್ಸ್ನಲ್ಲಿ ಸುದೀರ್ಘ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
ರಾಹುಲ್ ಗಾಂಧಿಯವರ ಆಂತರಿಕ ವಲಯವು ಪ್ರತ್ಯೇಕವಾಗಿ ಗುರುತಿಸಿಕೊಂಡು ಸವಲತ್ತುಗಳನ್ನು ಅನುಭವಿಸುತ್ತಿದೆ ಎಂದು ಆರೋಪಿಸಿದ್ದು, ಅವರು ತಮ್ಮ ಬೆಂಬಲಿಗರು ಎಂದು ಕರೆಯಲ್ಪಡುವವರು ಪ್ರಾಮಾಣಿಕರಾಗಿರಲು ಮತ್ತು ಪಂಜಾಬ್ಗಾಗಿ ಕೆಲಸ ಮಾಡಲು ಸಿದ್ಧರಿದ್ದಾರೆಯೇ ಎಂದು ಪರಿಶೀಲಿಸಬೇಕು. ನಿಮ್ಮ ಅನೇಕ ಬೆಂಬಲಿಗರು ನಿಸ್ವಾರ್ಥ ಸೇವೆ ಸಲ್ಲಿಸಲು ಸಿದ್ಧರಿಲ್ಲ; ಬದಲಾಗಿ, ಅವರು ತಮ್ಮ ಜೇಬುಗಳನ್ನು ತುಂಬಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಏಕೆಂದರೆ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರಿಗೆ ಗೊತ್ತು. ನಿಮಗೆ ಧೈರ್ಯವಿದ್ದರೆ, ಪ್ರಸ್ತುತ ಸರ್ಕಾರದ ವಿರುದ್ಧ ಮಾತನಾಡಲು ಹೇಳಿ ಎಂದು ಕೌರ್ X ನಲ್ಲಿ ಬರೆದಿದ್ದಾರೆ.