ಮುಂಬೈ: ಉದ್ದೇಶಪೂರ್ವಕವಾಗಿ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುವಾಗ ನ್ಯಾಯಯುತ ಪರಿಹಾರ ಪಡೆಯಲು ಸಾಧ್ಯವಿಲ್ಲ ಎಂದು ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಛೀಮಾರಿ ಹಾಕಿದೆ. ಭಾರತಕ್ಕೆ ಮರಳಲು ಕೊನೆ ಅವಕಾಶ ನೀಡಿದೆ.
ಕೇಂದ್ರ ಸರ್ಕಾರದ ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅನ್ಬಾಡ್ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಮಲ್ಯ ನ್ಯಾಯಾಲಯದ ವ್ಯಾಪ್ತಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ದಾಖಲೆಗಳು ತೋರಿಸುತ್ತಿವೆ. ಆದ್ದರಿಂದ ಅವರ ಅರ್ಜಿಯಲ್ಲಿ ಪರಿಹಾರವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ನ್ಯಾಯ ಪೀಠ ಹೇಳಿದೆ.
"ನೀವು ಕೂಡಲೇ ಭಾರತಕ್ಕೆ ಮರಳಬೇಕು. ಇಲ್ಲದಿದ್ದರೆ ನಿಮ್ಮ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದೀರಿ. ಹೀಗಾಗಿ ನ್ಯಾಯಯುತ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ನ್ಯಾಯಯುತವಾಗಿ ಪ್ರಕರಣ ವಜಾಗೊಳಿಸಲು ಸಾಧ್ಯವಿಲ್ಲ. ಭಾರತಕ್ಕೆ ಮರಳಲು ಕೊನೆಯ ಅವಕಾಶ ನೀಡುತ್ತಿರುವುದಾಗಿ ಹೇಳಿದ ನ್ಯಾಯಾಲಯ ಮುಂದಿನ ವಾರಕ್ಕೆ ಪ್ರಕರಣವನ್ನು ಮುಂದೂಡಿದೆ.