ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ವೀರಂಪಟ್ಟಿನಂ ಬಳಿಯ ಬೀಚ್ ಗೆ ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರಿನ 33 ವರ್ಷದ ಮಹಿಳೆ ಗುರುವಾರ ಬಂಗಾಳ ಕೊಲ್ಲಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಸೋನಿಯಾ ಎಂದು ಗುರುತಿಸಲಾಗಿದೆ.
ತನ್ನ ಪತಿ ಮತ್ತು ಮೂವರು ಮಕ್ಕಳೊಂದಿಗೆ ಖಾಸಗಿ ದೋಣಿಯಲ್ಲಿ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಪ್ರಯಾಣದ ವೇಳೆ ದೋಣಿ ಮಗುಚಿ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.
ದೋಣಿಯ ಸಿಬ್ಬಂದಿ ಸಹಾಯಕ್ಕಾಗಿ ಕೂಗಿಕೊಂಡಾಗ ಸ್ಥಳೀಯ ಮೀನುಗಾರರು ವಿವಿಧ ದಿಕ್ಕುಗಳಿಂದ ಧಾವಿಸಿ ಕುಟುಂಬದ ಇತರ ಸದಸ್ಯರನ್ನು ರಕ್ಷಿಸಿದ್ದಾರೆ. ಆದರೆ ಘಟನೆಯಲ್ಲಿ ಸೋನಿಯಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಉಳಿದ ನಾಲ್ವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮೀನುಗಾರರು ವೀರಂಪಟ್ಟಿನಂ ವ್ಯಾಪ್ತಿಯಲ್ಲಿ ಬರುವ ಅರಿಯಂಕುಪ್ಪಂ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕರಾವಳಿ ಕಾವಲು ಪಡೆಯೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಅಪಾಯದಿಂದ ಪಾರಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.