ತಿರುವನಂತಪುರಂ: ಶಬರಿಮಲೆ ಚಿನ್ನಾಭರಣ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಶುಕ್ರವಾರ ಇಲ್ಲಿನ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕ ಕಂದರಾರು ರಾಜೀವರನ್ನು ಬಂಧಿಸಿದೆ.
ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವರು ಅವರನ್ನು ಬೆಳಿಗ್ಗೆ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೊಳಪಡಿಸಲಾಯಿತು. ನಂತರ ಮಧ್ಯಾಹ್ನ ಎಸ್ಐಟಿ ಕಚೇರಿಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅಧಿಕೃತವಾಗಿ ಬಂಧಿಸಲಾಯಿತು ಎಂದು ಮೂಲಗಳು ಹೇಳಿವೆ.
ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪಾಟಿ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎ ಪದ್ಮಕುಮಾರ್ ನೀಡಿದ ಹೇಳಿಕೆಗಳನ್ನು ಆಧರಿಸಿ ಇವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜೀವರು ಪಾಟಿಯೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು ಮತ್ತು ದ್ವಾರಪಾಲಕರ ವಿಗ್ರಹಗಳ ಚಿನ್ನದ ಲೇಪನ ಬದಲಾಯಿಸಲು ಶಿಫಾರಸು ಮಾಡಿದ್ದಾರೆ ಎಂದು SIT ತನಿಖೆ ವೇಳೆ ತಿಳಿದುಬಂದಿದೆ.
ನಂತರ, ತಿರುವಾಂಕೂರು ದೇವಸ್ವಂ ಮಂಡಳಿಯು ಮರುಲೇಪನಕ್ಕೆ ಅನುಮತಿ ಕೋರಿದಾಗ ರಾಜೀವರು ಅನುಮೋದನೆಯನ್ನು ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಈ ಹಿಂದೆ ರಾಜೀವರನ್ನು ವಿಚಾರಣೆ ನಡೆಸಲಾಗಿತ್ತು ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಚಿನ್ನ ಕಳ್ಳತನ ಪ್ರಕರಣದ ತನಿಖೆಗಾಗಿ ಕೇರಳ ಹೈಕೋರ್ಟ್ ಎಸ್ಐಟಿ ರಚಿಸಿದ ನಂತರ ಪ್ರಕರಣದಲ್ಲಿ ಬಂಧಿತರಾದವರಲ್ಲಿ ರಾಜೀವರ 11 ನೇ ವ್ಯಕ್ತಿಯಾಗಿದ್ದಾರೆ.
ರಿಮಾಂಡ್ ಪ್ರಕ್ರಿಯೆಯ ಭಾಗವಾಗಿ ಅವರನ್ನು ವಿಜಿಲೆನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳ ಹೈಕೋರ್ಟ್ನ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ದೇವಸ್ವಂ ಸಚಿವ ವಿ ಎನ್ ವಾಸವನ್ ಹೇಳಿದ್ದಾರೆ.