ವಿಶಾಖಪಟ್ಟಣಂ ಕರಾವಳಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ 6 ಮೀನುಗಾರರು ನಾಪತ್ತೆ 
ದೇಶ

ವಿಶಾಖಪಟ್ಟಣಂ ಕರಾವಳಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ 6 ಮೀನುಗಾರರು ನಾಪತ್ತೆ; ಒಬ್ಬನ ರಕ್ಷಣೆ

ನಾಪತ್ತೆಯಾಗಿರುವ ಮೀನುಗಾರರಿಗಾಗಿ ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard) ಮತ್ತು ಸಾಗರ ಪೊಲೀಸ್ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಕರಾವಳಿಯಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಏಳು ಮೀನುಗಾರರಿದ್ದ ಮೀನುಗಾರಿಕಾ ದೋಣಿ ಮಗುಚಿರುವ ಶಂಕೆ ವ್ಯಕ್ತವಾಗಿದ್ದು, ಈ ದುರ್ಘಟನೆಯಲ್ಲಿ ಆರು ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕರಾವಳಿಯಲ್ಲಿ ಹಾದು ಹೋಗುತ್ತಿದ್ದ ಕ್ರೂಸ್ ಹಡಗು ಒಬ್ಬ ಮೀನುಗಾರನನ್ನು ರಕ್ಷಿಸಿದೆ ಎಂದು ಮೀನುಗಾರರ ಸಂಘದ ಮುಖಂಡರು ಭಾನುವಾರ ತಿಳಿಸಿದ್ದಾರೆ. ನಾಪತ್ತೆಯಾಗಿರುವ ಮೀನುಗಾರರಿಗಾಗಿ ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard) ಮತ್ತು ಸಾಗರ ಪೊಲೀಸ್ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ಮೀನುಗಾರರೊಂದಿಗೆ ಸಂಪರ್ಕ ಕಡಿತಗೊಂಡಿರುವ ಬಗ್ಗೆ ಕುಟುಂಬಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ವಿಶಾಖಪಟ್ಟಣಂ ಮೀನುಗಾರಿಕಾ ದೋಣಿ ಸಂಘದ ಅಧ್ಯಕ್ಷ ಲಕ್ಷ್ಮಣ್ ರಾವ್ ಮಾತನಾಡಿ, "ಒಬ್ಬ ಮೀನುಗಾರನನ್ನು ಕ್ರೂಸ್ ಹಡಗು ಸುರಕ್ಷಿತವಾಗಿ ರಕ್ಷಿಸಿದೆ. ಉಳಿದ ಆರು ಮಂದಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ" ಎಂದು ತಿಳಿಸಿದ್ದಾರೆ.

ಸುಮಾರು 400 ಮೀನುಗಾರಿಕಾ ದೋಣಿಗಳು ಸಮುದ್ರಕ್ಕೆ ತೆರಳಿದ್ದವು. ಮುಂಗಾರು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೀಸಿದ ಬಲವಾದ ಗಾಳಿ ಹಾಗೂ ಪ್ರತಿಕೂಲ ಹವಾಮಾನದಿಂದ ಹಲವು ದೋಣಿಗಳು ಸಂಕಷ್ಟಕ್ಕೆ ಸಿಲುಕಿದ್ದವು. ನಾಪತ್ತೆಯಾಗಿರುವ ಏಳು ಮೀನುಗಾರರು ಜುಲೈ 1ರಂದು ಮೀನುಗಾರಿಕೆಗೆ ತೆರಳಿದ್ದು, ಜುಲೈ 4ರಂದು ಮಧ್ಯಾಹ್ನ 2 ಗಂಟೆಯೊಳಗೆ ವಾಪಸ್ ಬರುವುದಾಗಿ ತಮ್ಮ ಕುಟುಂಬ ಸದಸ್ಯರಿಗೆ ತಿಳಿಸಿದ್ದರು.

ಆದರೆ, ಅವರ ಮೊಬೈಲ್ ಫೋನ್‌ಗಳು ಸಂಪರ್ಕಕ್ಕೆ ಸಿಗದೇ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ಕುಟುಂಬಸ್ಥರು ಕರಾವಳಿ ರಕ್ಷಣಾ ಪಡೆ ಮತ್ತು ಸಾಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೀನುಗಾರಿಕೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ದೋಣಿಯೊಂದಿಗಿನ ಸಂಪರ್ಕ ಕಡಿತಗೊಂಡಿದ್ದು, ಬಿರುಗಾಳಿ ಮತ್ತು ಪ್ರತಿಕೂಲ ಹವಾಮಾನದಿಂದ ದೋಣಿ ಮಗುಚಿರಬಹುದೆಂದು ಶಂಕಿಸಲಾಗಿದೆ ಎಂದು ಲಕ್ಷ್ಮಣ್ ರಾವ್ ತಿಳಿಸಿದ್ದಾರೆ.

ಇದರ ಮಧ್ಯೆ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವಿಶಾಖಪಟ್ಟಣಂನಿಂದ ಆರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ರಕ್ಷಣಾ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಿದರು. ಅಧಿಕಾರಿಗಳು ಇದುವರೆಗೆ ಕೈಗೊಂಡಿರುವ ಶೋಧ ಕಾರ್ಯಾಚರಣೆ ಕುರಿತು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಇನ್ನಷ್ಟು ಕರಾವಳಿ ರಕ್ಷಣಾ ಪಡೆ ಹಡಗುಗಳನ್ನು ನಿಯೋಜಿಸಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ನಾಯ್ಡು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ, ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್‌ಗಳನ್ನೂ ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಿರುವುದಾಗಿ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಸಮುದ್ರದಲ್ಲಿ ನಡೆಯುತ್ತಿರುವ ಶೋಧ ಕಾರ್ಯಾಚರಣೆಯಲ್ಲಿ ಸಾಗರ ಪೊಲೀಸ್ ಹಾಗೂ ವಿಶಾಖಪಟ್ಟಣಂ ಪೊಲೀಸ್ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದು, ಕಾರ್ಯಾಚರಣೆಯ ಪ್ರಗತಿಯ ಬಗ್ಗೆ ನಿಯಮಿತವಾಗಿ ಮಾಹಿತಿ ನೀಡುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

ಶೋಪಿಯಾನ್‌ನಲ್ಲಿ ಮುಂದುವರಿದ ಕಾರ್ಯಾಚರಣೆ: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!

ಹಾರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಇರಾನ್ ಹೊಸ ಶುಲ್ಕ: ಮಿತ್ರ ರಾಷ್ಟ್ರಗಳಿಗೆ ಮಾತ್ರ ವಿಶೇಷ ಸೌಲಭ್ಯ..!