ಹರಿಯಾಣದ ಬಹಾದುರ್ಗಢದಲ್ಲಿ ಶನಿವಾರ ತಡರಾತ್ರಿ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸೇರಿದ ಇಬ್ಬರು ಶೂಟರ್ಗಳು ಮೃತಪಟ್ಟಿದ್ದಾರೆ.
ಕಳೆದ ತಿಂಗಳು ಹರಿಯಾಣದ ಹನ್ಸಿಯಲ್ಲಿ ಜಿಮ್ ಮಾಲೀಕನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಈ ಇಬ್ಬರೂ ಪ್ರಮುಖ ಆರೋಪಿಗಳಾಗಿದ್ದರು.
ಪೊಲೀಸರ ಪ್ರಕಾರ, ಮೃತಪಟ್ಟವರನ್ನು ಪ್ರವೇಶ್ ಹಾಗೂ ಹಿಮಾಂಶು ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಹರಿಯಾಣ ಪೊಲೀಸ್ ವಿಶೇಷ ಕಾರ್ಯಪಡೆ (STF) ಹಾಗೂ ದೆಹಲಿ ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ ಸ್ಪೆಷಲ್ ಸೆಲ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು.
ಬಹದ್ದೂರ್ಗಢ ಪ್ರದೇಶದಲ್ಲಿ ಇಬ್ಬರನ್ನು ತಡೆದ ವೇಳೆ ಆರೋಪಿಗಳು ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಇಬ್ಬರೂ ಮೃತಪಟ್ಟಿರುವುದಾಗಿ ಘೋಷಿಸಿದರು.
ಗುಂಡಿನ ಚಕಮಕಿಯ ವೇಳೆ ಪೊಲೀಸ್ ಕಾನ್ಸ್ಟೆಬಲ್ ಒಬ್ಬರ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಜೂನ್ 11ರಂದು ಹನ್ಸಿಯಲ್ಲಿ ಜಿಮ್ ಮಾಲೀಕ ಕಪಿಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಕಪಿಲ್ ಅವರು ತರಬೇತಿ ಪಡೆಯುತ್ತಿದ್ದವರೊಂದಿಗೆ ಹೊರಾಂಗಣದಲ್ಲಿ ವ್ಯಾಯಾಮ ನಡೆಸುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.
ಈ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಂತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಕರಣದ ತನಿಖೆ ವೇಳೆ ಈ ಕೊಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ನಡೆದಿರುವುದು ಬೆಳಕಿಗೆ ಬಂದಿತ್ತು. ತನಿಖೆಯ ಬಳಿಕ ಪ್ರವೇಶ್ ಮತ್ತು ಹಿಮಾಂಶು ಅವರನ್ನು ಪ್ರಮುಖ ಶೂಟರ್ಗಳೆಂದು ಪೊಲೀಸರು ಗುರುತಿಸಿದ್ದರು.
ಪ್ರವೇಶ್ ಹರಿಯಾಣದ ಹಿಸಾರ್ ಜಿಲ್ಲೆಯ ತಿಬ್ಬಾ ದನಶೇರ್ ಗ್ರಾಮದ ನಿವಾಸಿಯಾಗಿದ್ದರೆ, ಹಿಮಾಂಶು ಅದೇ ಜಿಲ್ಲೆಯ ಜಾಖೋಡ್ ಖೇರಾ ಗ್ರಾಮದ ನಿವಾಸಿಯಾಗಿದ್ದಾನೆ. ಇವರಿಬ್ಬರ ಕುರಿತಂತೆ ಮಾಹಿತಿ ನೀಡಿದವರಿಗೆ ತಲೆಯ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.
ಈ ಪ್ರಕರಣದ ತನಿಖೆ ಇನ್ನೂ ಮುಂದುವರಿದಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇತರ ಸದಸ್ಯರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.