ಕೋಲ್ಕತ್ತಾ: ಕೆಲವು ತಿಂಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಪ್ರಾರಂಭಿಸಿದ ಹೆಲ್ತ್ ಕೇರ್ ಕಾರ್ಯಕ್ರಮ ಸೆಬಾಶ್ರಯ್ ಶಿಬಿರದಲ್ಲಿ ಮೊಣಕಾಲು ನೋವಿಗೆ ಚಿಕಿತ್ಸೆ ಪಡೆದ ನಂತರ ಕಾಲು ಕಳೆದುಕೊಂಡಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ ನಂತರ ಸಂಸದರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜನವರಿ 2 ರಂದು ಡೈಮಂಡ್ ಹಾರ್ಬರ್ ಸಂಸದ ಆಗಿರುವ ಅಭಿಷೇಕ್ ಬ್ಯಾನರ್ಜಿ ರಾಜ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಸೆಬಾಶ್ರಯ್ ಆರೋಗ್ಯ ಶಿಬಿರಗಳಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಈಗಾಗಲೇ ಎರಡು ಎಫ್ಐಆರ್ಗಳು ದಾಖಲಾಗಿವೆ.
ದಕ್ಷಿಣ 24 ಪರಗಣ ಜಿಲ್ಲೆಯ ಮಹೇಶತಲಾದ ಮಹಿಳೆ ಮಾಲೋತಿ ಬಿಸ್ವಾಸ್, ಆರೋಗ್ಯ ಶಿಬಿರದಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ತನ್ನ ಕಾಲು ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ ನಂತರ ಮೂರನೇ ಎಫ್ಐಆರ್ ದಾಖಲಿಸಲಾಗಿದೆ.
ಬಿಸ್ವಾಸ್ ಕೆಲವು ತಿಂಗಳ ಹಿಂದೆ ಮೊಣಕಾಲು ನೋವಿನ ಸಮಸ್ಯೆಯಿಂದಾಗಿ ಆರೋಗ್ಯ ಶಿಬಿರಕ್ಕೆ ಹಾಜರಾಗಿದ್ದರು ಮತ್ತು ಅವರಿಗೆ ಕೆಲವು ಔಷಧಿಗಳನ್ನು ಶಿಫಾರಸು ಮಾಡಲಾಗಿತ್ತು. ಅದನ್ನು ಅವರು ತೆಗೆದುಕೊಳ್ಳಲು ಪ್ರಾರಂಭಿಸಿದ್ದರು. ಆದರೆ ಅವರ ಸ್ಥಿತಿ ಹದಗೆಟ್ಟಿತ್ತು. ಮತ್ತೊಂದು ಸೆಬಾಶ್ರಯ್ ಶಿಬಿರವನ್ನು ಸಂಪರ್ಕಿಸಬೇಕಾಯಿತು.
ಎರಡನೇ ಶಿಬಿರದ ವೈದ್ಯರು ಚಿಕಿತ್ಸೆಗಾಗಿ ದೊಡ್ಡ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಅವರು ಹಣ ನೀಡಲು ನಿರಾಕರಿಸಿದ ನಂತರ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ತದನಂತರ ಬಿಸ್ವಾಸ್ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಬಲಗಾಲಿಗೆ ಆದ ಹಾನಿಯನ್ನು ಸರಿಪಡಿಸಲಾಗದು ಎಂದು ಅಲ್ಲಿನ ವೈದ್ಯರು ತಿಳಿದ ನಂತರ ಅದನ್ನು ಕತ್ತರಿಸಬೇಕಾಯಿತು ಎಂದು ಅವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಅಭಿಷೇಕ್ ಬ್ಯಾನರ್ಜಿ ಮತ್ತು ಇತರ ಕೆಲವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ರವೀಂದ್ರನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.