ನವದೆಹಲಿ: ಜಂತರ್ ಮಂತರ್ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದ್ದು, ಶನಿವಾರ ಬೆಳಗ್ಗೆ ದೆಹಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಂಗ್ಚುಕ್ ಆಸ್ಪತ್ರೆಗೆ ದಾಖಲಾದ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಭಾರಿ ಬಂದೋಬಸ್ತ್ ಮಾಡಲಾಗಿದ್ದು, ರಾಷ್ಟ್ರ ರಾಜಧಾನಿಯ ಹಲವೆಡೆ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.
ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಾಂಗ್ಚುಕ್ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.
ಜುಲೈ 20ರಂದು ವಾಂಗ್ಚುಕ್ ಮತ್ತು ಅವರ ಬೆಂಬಲಿಗರು ಸಂಸತ್ ವರೆಗೂ ಪಾದಯಾತ್ರೆ ನಡೆಸಲು ಯೋಜಿಸಿದ್ದರು. ಆದರೆ ಅದಕ್ಕೂ ಮುನ್ನಾ ಹೈಕೋರ್ಟ್ ಆದೇಶದ ಪ್ರಕಾರ ಮತ್ತು ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ, ಅವರನ್ನು ಅಗತ್ಯ ವೈದ್ಯಕೀಯ ಆರೈಕೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೆಹಲಿ ಹೈಕೋರ್ಟ್ನ ನಿರ್ದೇಶನದಂತೆ, ಆರೋಗ್ಯ ಹದಗೆಟ್ಟಿದ್ದ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಉಪ ಆಯುಕ್ತ (ನವದೆಹಲಿ) ಸಚಿನ್ ಶರ್ಮಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಈ ಪ್ರಕ್ರಿಯೆಗೆ ಕೆಲ ಪ್ರತಿಭಟನಾಕಾರರು ಅಡ್ಡಿಪಡಿಸಲು ಯತ್ನಿಸಿದ್ದರಿಂದ ಸ್ವಲ್ಪ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು; ಆದಾಗ್ಯೂ, ಪೊಲೀಸರು ಅತ್ಯಂತ ಸಂಯಮದಿಂದ ವರ್ತಿಸಿ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಪ್ರತಿಭಟನಾ ಸ್ಥಳವನ್ನು ಆದಷ್ಟು ಬೇಗ ಶಾಂತಿಯುತವಾಗಿ ತೆರವುಗೊಳಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಬೇಕೆಂದು ಪೊಲೀಸರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿದರು.