ನವದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನೀಟ್ (NEET) ಸೇರಿದಂತೆ ವಿವಿಧ ಶಿಕ್ಷಣ ಸಂಬಂಧಿತ ವಿಚಾರಗಳ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆಗೆ ಆಗ್ರಹ ಕೇಳಿಬರುತ್ತಿರುವ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಂಸತ್ ಅಧಿವೇಶನದ ವೇಳೆ ವಿದ್ಯಾರ್ಥಿಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವರು, ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು "ರಾಜಕೀಯ ದಾಳವಾಗಿ" ಬಳಸಿಕೊಂಡು ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಸ್ತವ್ಯಸ್ತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಅವರ ನಿವಾಸವಾದ 7 ಲೋಕ ಕಲ್ಯಾಣ ಮಾರ್ಗದ ಹೊರಗೆ ಕಾಂಗ್ರೆಸ್ ನಾಯಕರು ಧರಣಿ ನಡೆಸಿರುವುದನ್ನೂ ಅವರು ಟೀಕಿಸಿದರು.
ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಭದ್ರತಾ ನಿಯಮಗಳನ್ನೂ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು.
ಸರ್ಕಾರವು ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆಗೆ ಸಿದ್ಧವಿರುವುದಾಗಿ ತಿಳಿಸಿದ್ದರೂ, ಕಾಂಗ್ರೆಸ್ ಪ್ರಜಾಪ್ರಭುತ್ವದ ಚರ್ಚೆಯ ಬದಲು ರಾಜಕೀಯ ಪ್ರದರ್ಶನಕ್ಕೆ ಆದ್ಯತೆ ನೀಡಿದೆ. ಕಾಂಗ್ರೆಸ್ನ ಉದ್ದೇಶ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವುದಲ್ಲ. ರಾಜಕೀಯ ಸುದ್ದಿಯಾಗಲು ಅಡ್ಡಿಪಡಿಸುವುದೇ ಅವರ ಗುರಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದು ವಿದ್ಯಾರ್ಥಿಗಳ ಹಿತದ ಪ್ರಶ್ನೆಯಲ್ಲ. ಚರ್ಚೆಗೆ ಎಲ್ಲ ಅವಕಾಶಗಳಿದ್ದರೂ ಸಂಘರ್ಷದ ವಾತಾವರಣ ಸೃಷ್ಟಿಸುವುದು ರಾಹುಲ್ ಗಾಂಧಿಯ ಉದ್ದೇಶವಾಗಿದೆ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ ನೀಟ್ ಹಾಗೂ ವಿದ್ಯಾರ್ಥಿಗಳ ಇತರೆ ನೈಜ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಪುನರುಚ್ಚರಿಸಿರುವ ಅವರು, ಸಂಸತ್ತಿನ ಸದನದಲ್ಲಿ ನೀಟ್ ಸೇರಿದಂತೆ ಯುವಕರ ಎಲ್ಲಾ ನೈಜ ಸಮಸ್ಯೆಗಳ ಕುರಿತು ಚರ್ಚಿಸಲು ನಮ್ಮ ಸರ್ಕಾರ ಶೇ.100ರಷ್ಟು ಸಿದ್ಧವಾಗಿದೆ. ಭಾರತದ ವಿದ್ಯಾರ್ಥಿಗಳನ್ನು ರಾಜಕೀಯ ಅಭಿಯಾನದ ವಸ್ತುವಾಗಿ ಬಳಸಬಾರದು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಗೊಂದಲಕ್ಕಿಂತ ಭರವಸೆ ಬೇಕು. ಘೋಷಣೆಗಳಿಗಿಂತ ಪರಿಹಾರ ಬೇಕು. ಅಡ್ಡಿಪಡಿಸುವುದಕ್ಕಿಂತ ಜವಾಬ್ದಾರಿಯುತ ನಡೆ ಬೇಕು. ವಿದ್ಯಾರ್ಥಿಗಳಿಗೆ ಕೇವಲ ಆಕ್ರೋಶವಲ್ಲ, ಉತ್ತರಗಳು, ಸುಧಾರಣೆಗಳು ಮತ್ತು ಹೊಣೆಗಾರಿಕೆ ನೀಡುವುದು ನಮ್ಮ ಕರ್ತವ್ಯ. ಅದನ್ನೇ ನಮ್ಮ ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.
ಸೋಮವಾರ ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಪೊಲೀಸ್ ಕ್ರಮ ಕೈಗೊಂಡಿದ್ದನ್ನು ಖಂಡಿಸಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಮಂಗಳವಾರ ಪ್ರಧಾನಿ ನಿವಾಸದ ಹೊರಗೆ ಧರಣಿ ನಡೆಸಿದ್ದರು.
ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪ್ರಧಾನ ಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರಾಹುಲ್ ಗಾಂಧಿ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಆದರೆ, ಈ ಮಾತುಕತೆ ಯಾವುದೇ ಫಲಿತಾಂಶ ನೀಡಲಿಲ್ಲ.
ನಂತರ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರನ್ನು ವಶಕ್ಕೆ ಪಡೆದು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿದರು. ಕೆಲವು ಗಂಟೆಗಳ ಬಳಿಕ ಎಲ್ಲ ನಾಯಕರನ್ನೂ ಬಿಡುಗಡೆ ಮಾಡಲಾಯಿತು.