ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸಕ್ರಿಯವಾಗಿದ್ದ ಇಬ್ಬರು ಲಷ್ಕರ್-ಇ-ತೊಯ್ಬಾ (LeT) ಉಗ್ರರ ಮನೆಗಳನ್ನು ಭದ್ರತಾಪಡೆಗಳು ಬುಧವಾರ ಮಧ್ಯರಾತ್ರಿ ಧ್ವಂಸಗೊಳಿಸಿದ್ದಾರೆ.
ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಆದಿಲ್ ಠೋಕರ್ ಮತ್ತು ಹಾರೂನ್ ರಶೀದ್ ಗನೈ ಎಂಬ ಇಬ್ಬರು ಲಷ್ಕರ್ ಉಗ್ರರ ಮನೆಗಳನ್ನು ತಡರಾತ್ರಿ ಕಾರ್ಯಾಚರಣೆ ನಡೆಸಿ, ನೆಲಸಮಗೊಳಿಸಿದ್ದಾರೆ.
ಬುಧವಾರ ಮಧ್ಯಾಹ್ನ ಅನಂತನಾಗ್ನ ಲಾಲ್ ಚೌಕ್ ಪ್ರದೇಶದಲ್ಲಿ ಅಮರನಾಥ ಯಾತ್ರೆಯ ಭದ್ರತೆಯಲ್ಲಿ ನಿಯೋಜಿತರಾಗಿದ್ದ ಹೆಡ್ ಕಾನ್ಸ್ಟೇಬಲ್ ಆಶಿಕ್ ಹುಸೇನ್ ಅವರನ್ನು ಏಕಾಂಗಿಯಾಗಿ ಬಂದ ಉಗ್ರನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದ. ಈ ಘಟನೆಯ ಬೆನ್ನಲ್ಲೇ ಭದ್ರತಾ ಪಡೆಗಳು ಮತ್ತು ಆಡಳಿತ ಕಠಿಣ ಕ್ರಮಕ್ಕೆ ಮುಂದಾಗಿವೆ.
ಕಾಶ್ಮೀರದಲ್ಲಿ ಈ ಹಿಂದೆ ಹಲವು ಬಾರಿ ಸಕ್ರಿಯ ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿತ್ತು. ಆದರೆ, ಕಳೆದ ಸುಮಾರು ಒಂದು ವರ್ಷದಿಂದ ಹಿಂಸಾಚಾರದ ಘಟನೆಗಳು ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಇಂತಹ ಕ್ರಮಗಳು ಸ್ಥಗಿತಗೊಂಡಿದ್ದವು. ಇದೀಗ ಪೊಲೀಸ್ ಸಿಬ್ಬಂದಿಯ ಹತ್ಯೆಯ ನಂತರ ಮತ್ತೆ ಉಗ್ರರ ವಿರುದ್ಧ ಕಠಿಣ ಕಾರ್ಯಾಚರಣೆ ಆರಂಭವಾಗಿದೆ.