ನವದೆಹಲಿ: 2025 ರಲ್ಲಿ ಹನಿಮೂನ್ಗೆ ಹೋಗಿದ್ದಾಗ ಪತಿಯನ್ನು ಕೊಲೆ ಮಾಡಿದ ಹಂತಕಿ ಪತ್ನಿ ಸೋನಮ್ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.
ಸೋನಮ್ಗೆ ನೀಡಲಾಗಿದ್ದ ಜಾಮೀನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರನ್ನೊಳಗೊಂಡ ಸುಪ್ರೀಂ ಪೀಠ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೆ ಪೊಲೀಸರ ಮುಂದೆ ಶರಣಾಗಲು ಆರೋಪಿಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.
ಪ್ರಕರಣದ ವಿಚಾರಣೆಯು ಆರು ತಿಂಗಳೊಳಗೆ ಮುಕ್ತಾಯಗೊಳ್ಳದಿದ್ದರೆ, ಸೋನಮ್ ಅವರು ಹೊಸದಾಗಿ ಜಾಮೀನು ಅರ್ಜಿಯನ್ನು ಸಲ್ಲಿಸಲು ಮುಕ್ತರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮಧ್ಯಪ್ರದೇಶದ ಇಂದೋರ್ ನಿವಾಸಿಯಾಗಿರುವ ಆರೋಪಿ ಸೋನಮ್, ತನ್ನ ಉದ್ಯಮಿ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದಲ್ಲಿ ಕಳೆದ ವರ್ಷ ಜೂನ್ನಲ್ಲಿ ಬಂಧಿಸಲಾಗಿತ್ತು. ಬಳಿಕ ಮೇಘಾಲಯ ಹೈಕೋರ್ಟ್ ಆರೋಪಿಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
2025ರ ಮೇ 23ರಂದು ಮೇಘಾಲಯದ ಸೋಹ್ರಾ ಪ್ರದೇಶಕ್ಕೆ ಹನಿಮೂನ್ಗೆ ಹೋಗಿದ್ದ ಈ ದಂಪತಿ ನಾಪತ್ತೆಯಾಗಿದ್ದರು. ತದನಂತರ ಜೂನ್ 2ರಂದು ರಾಜಾ ರಘುವಂಶಿ ಅವರ ಮೃತದೇಹ ಆಳವಾದ ಕಂದಕದಲ್ಲಿ ಪತ್ತೆಯಾಗಿತ್ತು. ಆರ್ಥಿಕ ಲಾಭಕ್ಕಾಗಿ ಸೋನಂ ಬಾಡಿಗೆ ಹಂತಕರೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ಮೇಘಾಲಯ ಪೊಲೀಸರು ಆರೋಪಿಸಿದ್ದಾರೆ.