ನವದೆಹಲಿ: ಎರಡನೇ ಸುತ್ತಿನ ಮಾತುಕತೆಯಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ತನ್ನ ಮೂರು ಪ್ರಮುಖ ಬೇಡಿಕೆಗಳಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂತ್ರಸ್ತರಿಗೆ 1 ಕೋಟಿ ರೂಪಾಯಿ ಪರಿಹಾರ ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಬಾರದು ಎಂಬ ಬೇಡಿಕೆಗಳಲ್ಲಿ ಯಾವುದೇ ರಾಜಿ ಇಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಸ್ಪಷ್ಟಪಡಿಸಿದೆ.
ವಿಠಲಭಾಯಿ ಪಟೇಲ್ ಭವನದಲ್ಲಿ ಸಿಜೆಪಿ ನಿಯೋಗದೊಂದಿಗೆ ಮಾತುಕತೆ ನಡೆಸಿದ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಡಾ. ಜಿತೇಂದ್ರ ಸಿಂಗ್, ಪಕ್ಷದ ಬೇಡಿಕೆಗಳನ್ನು ಆಲಿಸಿದ್ದು, ಇಂದು ಸರ್ಕಾರದ ನಿಲುವನ್ನು ತಿಳಿಸುವುದಾಗಿ ಹೇಳಿದ್ದಾರೆ.
ಅವರು ಮೂರು ಪ್ರಮುಖ ಬೇಡಿಕೆಗಳು ಹಾಗೂ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದ ಐದು ಸಲಹೆಗಳನ್ನು ಮಂಡಿಸಿದರು. ನಾಳೆ ಮಧ್ಯಾಹ್ನ ಮತ್ತೆ ಭೇಟಿಯಾಗಿ ಸರ್ಕಾರದ ಅಭಿಪ್ರಾಯವನ್ನು ಹಂಚಿಕೊಳ್ಳುವುದಾಗಿ ನಾವು ತಿಳಿಸಿದ್ದೇವೆ ಎಂದು ನಡ್ಡಾ ಹೇಳಿದರು.
ಮಾತುಕತೆ ಸೌಹಾರ್ದಯುತ ವಾತಾವರಣದಲ್ಲಿ ನಡೆದಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯ ಪರಿಣಾಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದು ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವಕರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದು ಎಂಬ ಎರಡು ಬೇಡಿಕೆಗಳಿಗೆ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ಆದರೆ, ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂಬ ಸೂಚನೆಗಳು ದೊರೆತಿವೆ. ಅದರ ಬದಲಾಗಿ, ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳ ಮೂಲಕ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ಜಾರಿಗೆ ತರುವತ್ತ ಸರ್ಕಾರ ಗಮನಹರಿಸಲು ಉದ್ದೇಶಿಸಿದೆ.
ಭವಿಷ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ನಡೆಯದಂತೆ ತಡೆಯುವ ಕ್ರಮಗಳನ್ನು ಜಾರಿಗೆ ತರುವುದು, ಪರೀಕ್ಷಾ ಪ್ರಕ್ರಿಯೆಯಲ್ಲಿನ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಮೂಲಕ ವಿದ್ಯಾರ್ಥಿಗಳ ವಿಶ್ವಾಸವನ್ನು ಮರುಸ್ಥಾಪಿಸುವುದೇ ಸರ್ಕಾರದ ಆದ್ಯತೆಯಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಅರ್ಹತಾ ಪರೀಕ್ಷಾ ಸಂಸ್ಥೆ (NAT) ನಡೆಸುವ ನೀಟ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ವ್ಯವಸ್ಥೆಯನ್ನು ಪುನರ್ವ್ಯವಸ್ಥೆಗೊಳಿಸುವ ಭಾಗವಾಗಿ ಕೇಂದ್ರ ಸರ್ಕಾರ ಈಗಾಗಲೇ ಉನ್ನತ ಮಟ್ಟದ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಎನ್ಟಿಎಯ ಅನೇಕ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ.
ಮುಂದಿನ ದಿನಗಳಲ್ಲಿ ಕೇಂದ್ರ ಸಚಿವ ಸಂಪುಟ ಪುನಾರಚನೆ ನಡೆದರೆ ಧರ್ಮೇಂದ್ರ ಪ್ರಧಾನ್ ಅವರ ಖಾತೆಯಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಅಂತಹ ಪುನಾರಚನೆ ನಡೆಯುವ ಲಕ್ಷಣಗಳು ಕಾಣಿಸುತ್ತಿಲ್ಲ.
ಇಂದು ಅಪರಾಹ್ನ ಮಾತುಕತೆ
ಇಂದು ಮಧ್ಯಾಹ್ನ 3.30ಕ್ಕೆ ಸಿಜೆಪಿ-ಕೇಂದ್ರ ಸರ್ಕಾರದ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. ಅದರಲ್ಲಿ ಸರ್ಕಾರದ ನಿರ್ಧಾರ ಸ್ಪಷ್ಟವಾಗಲಿದೆ.