ಮುಂಬೈ: ನೀಟ್ ಪ್ರಶ್ನೆ ಪತ್ರಿಕೆ ಸೋರಿ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಯಶಸ್ವಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿರುವುದರ ನಡುವೆ ಪ್ರಧಾನಿ ಮೋದಿ, ವಿದ್ಯಾರ್ಥಿಗಳನ್ನು ತಲುಪಲು ಮಧ್ಯ ರಾತ್ರಿ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮ ಹಾಕಿದ್ದನ್ನು ಕಟುವಾಗಿ ಟೀಕಿಸಿದ ದೀಪ್ಕೆ, ನೀವು ದೇಶದ ಪ್ರಧಾನಿ ಹುದ್ದೆಯಿಂದ ಕೆಳಗಿಳಿದು "ಇನ್ಫುಲೆನ್ಸರ್" ಆಗಿ ಎಂದು ತಿರುಗೇಟು ನೀಡಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ನಂತರ ಬುಧವಾರ ಮಹಾರಾಷ್ಟ್ರದ ತಮ್ಮ ಊರಿಗೆ ಹಿಂದಿರುಗಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ದೀಪ್ಕೆ, ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಇನ್ಫುಲೆನ್ಸರ್ ಆಗಲು ಹೆಚ್ಚು ಸೂಕ್ತವೆಂದು ತೋರುತ್ತದೆ. ಹೀಗಾಗಿ ದೇಶವನ್ನು ಮುನ್ನಡೆಸುವ ಕೆಲಸವನ್ನು ಬೇರೆಯವರಿಗೆ ವಹಿಸಲು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಧಾನಿ ಮೋದಿಯ ಸೆಲ್ಪಿ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ದೀಪ್ಕೆ, "ಪ್ರಧಾನಿ ಮೋದಿ ಈಗ ಇನ್ಫುಲೆನ್ಸರ್ ಆಗಬೇಕು ಎಂದು ನಾನು ಭಾವಿಸುತ್ತೇನೆ. ಅವರು ಇನ್ಫುಲೆನ್ಸರ್ ಆಗಿ ಉತ್ತಮ ಕೆಲಸ ಮಾಡುತ್ತಾರೆ. ಹೀಗಾಗಿ ಅವರು ಪ್ರಧಾನಿ ಹುದ್ದೆಯನ್ನು ತ್ಯಜಿಸಬೇಕು. ಆಗ ಬೇರೆ ನಾಯಕರು ಆ ಕೆಲಸವನ್ನು ನಿಭಾಯಿಸಬಹುದು" ಎಂದರು.
ಪ್ರತಿಭಟನೆಯನ್ನು ಹಿಂತೆಗೆದುಕೊಂಡ ನಂತರವೂ ವಿದ್ಯಾರ್ಥಿ ಪ್ರತಿಭಟನಾಕಾರರು ಕಿರುಕುಳವನ್ನು ಎದುರಿಸುತ್ತಲೇ ಇದ್ದಾರೆ. ರಾಜ್ಯ ಸರ್ಕಾರಗಳು ಪ್ರತಿಭಟನೆಯಲ್ಲಿ ಭಾಗವಹಿಸಿದವರನ್ನು ಟಾರ್ಗೆಟ್ ಮಾಡುತ್ತಿವೆ ಎಂದು ಸಿಜೆಪಿ ಸಂಸ್ಥಾಪಕರು ಆರೋಪಿಸಿದರು.