ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಕೇವಲ ಆರಂಭ ಮಾತ್ರ. ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿರುವ ಸಮಸ್ಯೆಗಳು ಬಹಳ ಆಳವಾಗಿದ್ದು, ಅದರ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಇನ್ನೂ ದೀರ್ಘ ಹಾದಿ ಸಾಗಬೇಕಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ವಾಗ್ದಾಳಿ ನಡೆಸಿದೆ.
ಸಾಮಾಜಿಕ ಜಾಲತಾಣ ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಮಹಾರಾಷ್ಟ್ರದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಪ್ರಕ್ರಿಯೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದ ಮಾಧ್ಯಮ ವರದಿಯ ಚಿತ್ರವನ್ನು ಹಂಚಿಕೊಂಡು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿನ ಕೊಳೆ ತುಂಬಾ ಆಳವಾಗಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅದರ ಶುದ್ಧೀಕರಣದ ದೀರ್ಘ ಪಯಣದ ಮೊದಲ ಹೆಜ್ಜೆ ಮಾತ್ರ ಎಂದು ಹೇಳಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಹಾರಾಷ್ಟ್ರ ಕಾಮನ್ ಎಂಟ್ರನ್ಸ್ ಟೆಸ್ಟ್ (MH-CET) ಫಲಿತಾಂಶಗಳು ಮತ್ತು 12ನೇ ತರಗತಿ ಮಂಡಳಿ ಪರೀಕ್ಷೆಯ ಅಂಕಗಳ ನಡುವೆ ಗಮನಾರ್ಹ ವ್ಯತ್ಯಾಸ ಕಂಡುಬರುತ್ತಿದೆ.
MH-CETನಲ್ಲಿ ಅಗ್ರ ಸ್ಥಾನ ಪಡೆದ ವಿದ್ಯಾರ್ಥಿಗಳು ಮಂಡಳಿ ಪರೀಕ್ಷೆಯಲ್ಲಿ ಅದೇ ಮಟ್ಟದ ಸಾಧನೆ ಮಾಡಲು ವಿಫಲರಾಗುತ್ತಿದ್ದಾರೆ. ಇದಕ್ಕೆ ಪರೀಕ್ಷೆಯಲ್ಲಿ ಅಕ್ರಮ ಕಾರಣವೇ? ಅಥವಾ ಶಾಲಾ ಶಿಕ್ಷಣಕ್ಕಿಂತ ಕೋಚಿಂಗ್ ಸಂಸ್ಕೃತಿ ಹೆಚ್ಚುತ್ತಿರುವುದೇ ಕಾರಣ? ಈ ಬಗ್ಗೆ ಗಂಭೀರ ಆತ್ಮಾವಲೋಕನ ಅಗತ್ಯವಿದೆ. ಪ್ರಶ್ನೆಪತ್ರ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಕಾನೂನು ತರುವುದಷ್ಟೇ ಸಮಸ್ಯೆಗೆ ಪರಿಹಾರವಲ್ಲ ಎಂದು ತಿಳಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಪ್ರಶ್ನೆಪತ್ರ ಸೋರಿಕೆ ವಿರುದ್ಧ ಲಕ್ಷಾಂತರ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇವಲ ಕಾನೂನು ಜಾರಿಗೊಳಿಸುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಅದು ಯುವಕರ ನ್ಯಾಯಸಮ್ಮತ ಆಕ್ರೋಶ ಮತ್ತು ಭಾವನೆಗಳಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.