ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣೇಶ್ವರ ರೈಲು ನಿಲ್ದಾಣದಲ್ಲಿ ಗುರುವಾರ ಬರೊಬ್ಬರಿ 11 ಸಾವಿರ ವೋಲ್ಟ್ ಸಾಮರ್ಥ್ಯದ ವಿದ್ಯುತ್ ತಂತಿ ರೈಲಿನ ಮೇಲೆ ಬಿದ್ದಿದ್ದು, ಈ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಜೀವಂತ ವಿದ್ಯುತ್ ತಂತಿಯೊಂದು ರೈಲಿನ ಮೇಲೆ ಬಿದ್ದ ಪರಿಣಾಮ ಕೆಲಕಾಲ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ವಿದ್ಯುತ್ ಉಪಕರಣದಲ್ಲಿ ಉಂಟಾದ ದೋಷದಿಂದ ಬೆಂಕಿ ಸೃಷ್ಟಿಯಾಗಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಸುರಕ್ಷಿತ ಸ್ಥಳಗಳತ್ತ ಓಡಿದರು. ಅದೃಷ್ಟವಶಾತ್ ರೈಲ್ವೇ ಅಧಿಕಾರಿಗಳ ಸಮಯೋಚಿತ ಕ್ರಮದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.
ಮೂಲಗಳ ಪ್ರಕಾರ ಏಕಾಏಕಿ ಮುರಿದು ಬಿದ್ದ 11 ಕೆವಿ ಹೈಟೆನ್ಷನ್ ವಿದ್ಯುತ್ ತಂತಿ ರೈಲಿನ ಮೇಲೆ ಬಿದ್ದಿದ್ದು, ತಕ್ಷಣವೇ ಪ್ರಯಾಣಿಕರು ಭಯಭೀತರಾಗಿ ರೈಲಿನೊಳಗೇ ಉಳಿದರು.
ಘಟನೆ ತಿಳಿಯುತ್ತಿದ್ದಂತೆಯೇ ರೈಲ್ವೆ ಸಿಬ್ಬಂದಿ ಮತ್ತು ವಿದ್ಯುತ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದರು. ತಾಂತ್ರಿಕ ಸಿಬ್ಬಂದಿ ಹಾನಿಗೊಳಗಾದ ತಂತಿಯನ್ನು ತೆರವುಗೊಳಿಸಿ, ಮಾರ್ಗವನ್ನು ಸುರಕ್ಷಿತವೆಂದು ಘೋಷಿಸಿದ ಬಳಿಕ ರೈಲು ಸಂಚಾರವನ್ನು ಪುನರಾರಂಭಿಸಲಾಯಿತು.
ರೈಲ್ವೆ ಅಧಿಕಾರಿಗಳ ಪ್ರಕಾರ, ನಿಲ್ದಾಣದ ವಿದ್ಯುತ್ ಫಲಕದಲ್ಲಿ (ಎಲೆಕ್ಟ್ರಿಕಲ್ ಪ್ಯಾನಲ್) ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಅದರ ಪರಿಣಾಮ ಹೊಗೆ ಆವರಿಸಿತ್ತು. ಪರಿಸ್ಥಿತಿಯನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ತಕ್ಷಣವೇ ಎಚ್ಚೆತ್ತು, ಘಟನಾ ಸ್ಥಳವನ್ನು ಸುತ್ತುವರಿದು ಸುರಕ್ಷತಾ ಕ್ರಮಗಳನ್ನು ಕೈಗೊಂಡರು.
ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF) ಸಿಬ್ಬಂದಿ ಹಾಗೂ ತುರ್ತು ಸೇವಾ ತಂಡಗಳು ಸ್ಥಳಕ್ಕೆ ಧಾವಿಸಿ, ಪೀಡಿತ ಪ್ರದೇಶದ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರು. ಇದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಯಿತು.
ಅಗ್ನಿಶಾಮಕ ದಳದ ಸಿಬ್ಬಂದಿಯೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಕೆಲವೇ ಸಮಯದಲ್ಲಿ ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲಾಗಿದ್ದು, ಯಾವುದೇ ದೊಡ್ಡ ಅನಾಹುತ ಸಂಭವಿಸಲಿಲ್ಲ.
ಯಾರಿಗೂ ಅಪಾಯವಿಲ್ಲ
ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಅಥವಾ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಸುರಕ್ಷತಾ ಪರಿಶೀಲನೆ ಪೂರ್ಣಗೊಂಡ ಬಳಿಕ ರೈಲು ಸಂಚಾರವನ್ನು ಪುನರಾರಂಭಿಸಲಾಗಿದ್ದು, ಕೆಲ ರೈಲುಗಳು ಮಾತ್ರ ಅಲ್ಪ ಪ್ರಮಾಣದ ವಿಳಂಬವನ್ನು ಅನುಭವಿಸಿದವು.
ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ದೋಷವೇ ಶಾರ್ಟ್ ಸರ್ಕ್ಯೂಟ್ಗೆ ಕಾರಣ ಎಂದು ತಿಳಿದುಬಂದಿದೆ. ನಿಖರ ಕಾರಣ ಹಾಗೂ ವಿದ್ಯುತ್ ವ್ಯವಸ್ಥೆಗೆ ಉಂಟಾಗಿರುವ ಹಾನಿಯ ಬಗ್ಗೆ ತಾಂತ್ರಿಕ ತಂಡಗಳು ಸವಿಸ್ತಾರ ತನಿಖೆ ನಡೆಸುತ್ತಿವೆ. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ಭರವಸೆ ನೀಡಿದೆ.