ನವದೆಹಲಿ: ಭಾರತದ ಪ್ರಸ್ತುತ ಮುಖ್ಯಮಂತ್ರಿಗಳಲ್ಲಿ ಶೇ.45(14) ಜನರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅಗ್ರಸ್ಥಾನದಲ್ಲಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಬಿಡುಗಡೆ ಮಾಡಿದ ವರದಿ ತಿಳಿಸಿದೆ.
ದೇಶದ 28 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಇತ್ತೀಚಿಗೆ ತಾವು ಸ್ಪರ್ಧಿಸಿದ ಚುನಾವಣೆ ವೇಳೆ ಸಲ್ಲಿಸಿರುವ ಅಫಿಡವಿಟ್ಗಳಿಂದ ಈ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಎಡಿಆರ್ ಬಿಡುಗಡೆ ಮಾಡಿದ ವರದಿ ತಿಳಿಸಿದೆ.
31 ಮುಖ್ಯಮಂತ್ರಿಗಳ ಪೈಕಿ 14 ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿಕೊಂಡಿದ್ದಾರೆ. ಅವರಲ್ಲಿ 11 ಮುಖ್ಯಮಂತ್ರಿಗಳು ಗಂಭೀರ ಸ್ವರೂಪದ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಬ್ಬರು ಮುಖ್ಯಮಂತ್ರಿಗಳು ತಮ್ಮ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ ಎಂದು ಹೇಳಿಕೊಂಡಿದ್ದಾರೆ.
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿರುದ್ಧ ದಾಖಲಾಗಿರುವ 89 ಪ್ರಕರಣಗಳಲ್ಲಿ 72 ಪ್ರಕರಣಗಳು ಭಾರತೀಯ ದಂಡ ಸಂಹಿತೆಯ(IPC) ಗಂಭೀರ ವಿಭಾಗಗಳಾದ ಕ್ರಿಮಿನಲ್ ಬೆದರಿಕೆ, ದ್ವೇಷ ಉತ್ತೇಜಿಸುವುದು ಮತ್ತು ಹಲ್ಲೆಯ ಆರೋಪಗಳಾಗಿವೆ.
ರೆಡ್ಡಿ ನಂತರ ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಇದ್ದಾರೆ. ಅವರು 29 ಕ್ರಿಮಿನ್ ಪ್ರಕರಣಗಳನ್ನು ಹೊಂದಿದ್ದಾರೆ.
ಇನ್ನು ನಮ್ಮ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒಟ್ಟು 19 ಪ್ರಕರಣಗಳನ್ನು ಹೊಂದಿದ್ದಾರೆ. ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಪಂಜಾಬ್ ಸಿಎಂ ಭಗವಂತ್ ಮಾನ್, ಸಿಕ್ಕಿಂನ ಪಿ.ಎಸ್. ತಮಾಂಗ್, ಒಡಿಶಾದ ಮೋಹನ್ ಚರಣ್ ಮಾಝಿ ಮತ್ತು ರಾಜಸ್ಥಾನದ ಭಜನ್ ಲಾಲ್ ಶರ್ಮಾ ಅವರು ತಲಾ ಒಂದು ಪ್ರಕರಣಗಳನ್ನು ಹೊಂದಿದ್ದಾರೆ.