ಚೆನ್ನೈ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕದ ನಿಲುವನ್ನು ತಿರಸ್ಕರಿಸಿರುವ ತಮಿಳುನಾಡು ಸರ್ಕಾರ, ರಾಜ್ಯಕ್ಕೆ ಸಿಗಬೇಕಾದ ನೀರಿನ ಪಾಲು ಪಡೆಯಲು ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಘೋಷಿಸಿದೆ.
ತಮಿಳುನಾಡು ಕಾನೂನು ಸಚಿವ ಸಿಟಿಆರ್ ನಿರ್ಮಲ್ ಕುಮಾರ್ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, "ಕಾನೂನಿನ ಪ್ರಕಾರ ನಮಗೆ ಸಿಗಬೇಕಾದ ಕಾವೇರಿ ನೀರನ್ನು ಸುಪ್ರೀಂ ಕೋರ್ಟ್ ಮೂಲಕ ಪಡೆಯುತ್ತೇವೆ" ಎಂದು ಹೇಳಿದ್ದಾರೆ.
ಕರ್ನಾಟಕವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನಗಳಿದ್ದರೂ ಪದೇ ಪದೇ ತಮಿಳುನಾಡಿಗೆ ನೀರು ಬಿಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ತಮಿಳುನಾಡಿಗೆ ನ್ಯಾಯಯುತ ಪಾಲು ನಿರಾಕರಿಸುವ ರಾಜಕೀಯವನ್ನು ಕರ್ನಾಟಕ ಹಲವು ವರ್ಷಗಳಿಂದ ಮಾಡುತ್ತಿದೆ ಎಂದು ಟೀಕಿಸಿದರು.
ತಮಿಳುನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡಲು ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಕಾನೂನು ತಜ್ಞರು ಹಾಗೂ ವಿವಿಧ ಹಿತಾಸಕ್ತಿದಾರರೊಂದಿಗೆ ನಿರಂತರ ಸಮಾಲೋಚನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಅನುಸರಿಸಲಿರುವ ಸಮಗ್ರ ಕಾನೂನು ತಂತ್ರ ಹಾಗೂ ಅಂತಿಮ ನಿರ್ಧಾರಗಳನ್ನು ಒಂದು ವಾರದೊಳಗೆ ಪ್ರಕಟಿಸುವ ಸಾಧ್ಯತೆಯಿದೆ ಎಂದು ಸಚಿವರು ತಿಳಿಸಿದರು.
ಪ್ರಸ್ತುತ ಸರ್ಕಾರ ಹಲವು ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ಅವುಗಳಲ್ಲಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವುದು, ನ್ಯಾಯಮಂಡಳಿ (ಟ್ರಿಬ್ಯುನಲ್) ರಚನೆಗೆ ಒತ್ತಾಯಿಸುವುದು, ಅಂತರರಾಜ್ಯ ಮಟ್ಟದಲ್ಲಿ ಮಾತುಕತೆ ನಡೆಸುವುದು ಅಥವಾ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು ಸೇರಿವೆ ಎಂದು ಹೇಳಿದರು.