ದಾವಣಗೆರೆ: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ವೇದಿಕೆ ಸಜ್ಜಾಗುತ್ತಿರುವ ಬೆನ್ನಲ್ಲೇ ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸತೊಡಗಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಯುವ ಶಾಸಕ ಸಮರ್ಥ ಶಾಮನೂರು ಅವರೂ ಸೇರ್ಪಡೆಯಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವುಗೊಂಡಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದಿರುವ ಸಮರ್ಥ್ ಶಾಮನೂರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಹೊಸ ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಮರ್ಥ್, ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುವುದಾಗಿ ಹೇಳುವ ಮೂಲಕ ಅವರು ತಮ್ಮ ರಾಜಕೀಯ ಆಕಾಂಕ್ಷೆಯನ್ನು ಬಹಿರಂಗಪಡಿಸಿದ್ದಾರೆ.
'ಸಚಿವ ಸ್ಥಾನ ಸಿಕ್ಕರೆ ನಾನು ಖಂಡಿತವಾಗಿಯೂ ಹಿಂದೆ ಸರಿಯುವುದಿಲ್ಲ. ಸಚಿವ ಸ್ಥಾನ ಸಿಕ್ಕರೆ ರಾಜ್ಯ ಮತ್ತು ಕೇಂದ್ರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರ ಹಾಗೂ ಜಿಲ್ಲೆಯ ಕೆಲಸಗಳನ್ನು ಮಾಡುವುದಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ. ಅಧಿಕಾರವಿದ್ದರೆ ಜನರ ಕೆಲಸಗಳನ್ನು ಇನ್ನಷ್ಟು ವೇಗವಾಗಿ ಮಾಡಬಹುದು' ಎಂದು ತಿಳಿಸಿದ್ದಾರೆ.