ನವದೆಹಲಿ: ಜೂನ್ 3 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯದ ಹೊಸ ಸಂಪುಟದ ರಚನೆ ಅಂತಿಮಗೊಳಿಸಲು ಕಾಂಗ್ರೆಸ್ ವರಿಷ್ಠರೊಂದಿಗೆ ಮಂಗಳವಾರ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಹಿರಿಯ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರೊಂದಿಗಿನ ಸಭೆಯಲ್ಲಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭಾಗವಹಿಸಿದ್ದರು.
ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವ ಸಂಪುಟಕ್ಕೆ ಅಂತಿಮ ರೂಪ ನೀಡುವ ಬಗ್ಗೆ ಚರ್ಚೆಗಳು ಕೇಂದ್ರೀಕೃತವಾಗಿವೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಜೂನ್ 3 ರಂದು ಸಂಜೆ 4.05 ಗಂಟೆಗೆ ಲೋಕಭವನದ ಆವರಣದಲ್ಲಿ ಸಚಿವ ಸಂಪುಟದ ಕೆಲವು ಸದಸ್ಯರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 30 ರಂದು ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.
ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಹೊಸ ಸಚಿವ ಸಂಪುಟ ರಚನೆಯ ಕುರಿತು ಕಾಂಗ್ರೆಸ್ ಹೈಕಮಾಂಡ್ ಜೊತೆ ಸಮಾಲೋಚನೆಗಾಗಿ ಸೋಮವಾರ ನವದೆಹಲಿಗೆ ಆಗಮಿಸಿದರು.ಕರ್ನಾಟಕ ಸಚಿವ ಸಂಪುಟದ ಬಲವು ಮುಖ್ಯಮಂತ್ರಿ ಸೇರಿದಂತೆ 34 ಕ್ಕೆ ಸೀಮಿತವಾಗಿದ್ದು, ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆಯು ಶಿವಕುಮಾರ್ ಮುಂದಿರುವ ಮೊದಲ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ಹಲವಾರು ಮಾಜಿ ಸಚಿವರು ಮತ್ತು ಶಾಸಕರು ರಾಷ್ಟ್ರ ರಾಜಧಾನಿಯನ್ನು ತಲುಪಿದ್ದು,ಸಂಪುಟ ಸೇರಲು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ.
ಹೊಸ ಸಚಿವ ಸಂಪುಟದಲ್ಲಿ ಅನುಭವಿ ನಾಯಕರು ಮತ್ತು ಹೊಸ ಮುಖಗಳ ಮಿಶ್ರಣವಿದ್ದು, ಜಾತಿ ಪ್ರಾತಿನಿಧ್ಯ, ಪ್ರಾದೇಶಿಕ ಸಮತೋಲನ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಹೊಸ ಸರ್ಕಾರದಲ್ಲಿ ಹೆಚ್ಚಿನ ಸಂಖ್ಯೆಯ ಉಪ ಮುಖ್ಯಮಂತ್ರಿಗಳು ಇರಬಹುದು ಎಂಬ ಊಹಾಪೋಹವೂ ಇದೆ.
ಸಿದ್ದರಾಮಯ್ಯ ಅವರ ಪುತ್ರ ಮತ್ತು ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಅವರು ಭಾನುವಾರ ಶಿವಕುಮಾರ್ ಅವರನ್ನು ಭೇಟಿಯಾದ ನಂತರ ಪಕ್ಷದ ಹೈಕಮಾಂಡ್ ಅವರಿಗೆ ಸಚಿವ ಸ್ಥಾನದ ಭರವಸೆ ನೀಡಿದೆ ಎಂದು ಹೇಳಿದರು. ಇನ್ನೂ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆಯಿದೆ. ಆದರೆ ಅವರು ಕ್ಯಾಬಿನೆಟ್ ಸ್ಥಾನವನ್ನು ಸಹ ಬಯಸುತ್ತಿದ್ದಾರೆ ಎನ್ನಲಾಗಿದೆ.