ನವದೆಹಲಿ: ಆನ್-ಸ್ಕ್ರೀನ್ ಮಾರ್ಕಿಂಗ್ (OSM) ವ್ಯವಸ್ಥೆ ವಿವಾದದ ನಡುವೆ CBSE ಅಧ್ಯಕ್ಷ ರಾಹುಲ್ ಸಿಂಗ್ ಮತ್ತು ಕಾರ್ಯದರ್ಶಿ ಹಿಮಾಂಶು ಗುಪ್ತಾ ಅವರ ವರ್ಗಾವಣೆ ಬೆನ್ನಲ್ಲೇ ವಿಪಕ್ಷಗಳು ಕೇಂದ್ರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿವೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಕೇಳಿಬಂದಿರುವ ಅಕ್ರಮ ಆರೋಪದ ಜವಾಬ್ದಾರಿ ಶಿಕ್ಷಣ ಸಚಿವಾಲಯದ ಮೇಲಿದೆ. ಮೋದಿ ಸರ್ಕಾರ ರಾಜಕೀಯ ನಾಯಕರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.
"ಸಿಬಿಎಸ್ಇಯಲ್ಲಿನ ಅಕ್ರಮಗಳ ಸಂಪೂರ್ಣ ಜವಾಬ್ದಾರಿ ಶಿಕ್ಷಣ ಸಚಿವಾಲಯದ ಮೇಲಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ಜವಾಬ್ದಾರರಾಗಿದ್ದಾರೆ. ಕೇಂದ್ರ ಸರ್ಕಾರದ ಸುಪರ್ದಿಯಲ್ಲಿಯೇ ಈ ವಿವಾದ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
"COEMPT ನಂತಹ ಭ್ರಷ್ಟ ಕಂಪನಿಗೆ ಧರ್ಮೇಂದ್ರ ಪ್ರಧಾನ್ ಮತ್ತು ಮೋದಿ ಸರ್ಕಾರದ ಮೇಲ್ವಿಚಾರಣೆಯಲ್ಲಿ ಗುತ್ತಿಗೆ ನೀಡಲಾಗಿದೆ. ಈ ಸಣ್ಣತನದ ಕ್ರಮಗಳ ಮೂಲಕ ಮೋದಿ ಸರ್ಕಾರ ತನ್ನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಧರ್ಮೇಂದ್ರ ಪ್ರಧಾನ್ ಸಚಿವರಾಗಿ ಮುಂದುವರೆಯಲು ಯಾವುದೇ ನೈತಿಕ ಹಕ್ಕಿಲ್ಲ. ಅವರನ್ನು ನರೇಂದ್ರ ಮೋದಿ ರಕ್ಷಿಸುವುದನ್ನು ನಿಲ್ಲಿಸಿ ತಕ್ಷಣವೇ ವಜಾಗೊಳಿಸಬೇಕು ಎಂದು ಪಕ್ಷ ಹೇಳಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ. ಜವಾಬ್ದಾರಿಯನ್ನು ರಾಜಕಾರಣಿಗಳಿಂದ ಅಧಿಕಾರಿಗಳ ಮೇಲೆ ವರ್ಗಾಯಿಸುವುದಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.
ಸಿಬಿಎಸ್ಇ ಅಧ್ಯಕ್ಷ ರಾಹುಲ್ ಸಿಂಗ್ ಅವರಿಗೆ ನವೆಂಬರ್ 2025 ರಲ್ಲೇ ನೇಮಕಾತಿಗಳ ಕುರಿತಾದ ಸಂಪುಟ ಸಮಿತಿಯು ಎರಡು ವರ್ಷಗಳ ವಿಸ್ತರಣೆಯನ್ನು ನೀಡಿದೆ ಎಂಬುದನ್ನು ನೆನಪಿನಲ್ಲಿಡಬೇಕು ಎಂದು ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.