ಲಖನೌ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದ ಗ್ಯಾಂಗ್ ಸ್ಟರ್ ಗ್ಯಾನೆಂದ್ರ ಪ್ರತಾಪ್ ಸಿಂಗ್ ಅಲಿಯಾಸ್ ಮೋನು ನ್ಯಾಯಾಲಯಕ್ಕೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಕಾಯ್ದೆಯಡಿ ದಾಖಲಾಗಿದ್ದ ಹಳೆಯ ಪ್ರಕರಣವೊಂದರಲ್ಲಿ ಗ್ಯಾನೆಂದ್ರ ಪ್ರತಾಪ್ ಸಿಂಗ್ ಅಲಿಯಾಸ್ ಮೋನು ಅವರು ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೌ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಮಾಜಿ ಆಪ್ತ ಸಹಾಯಕ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಹಾಗೂ ಒಟ್ಟು 12 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಕುಖ್ಯಾತ ಗ್ಯಾಂಗ್ಸ್ಟರ್ ಮತ್ತು ಹಿಸ್ಟರಿ-ಶೀಟರ್ ಗ್ಯಾನೆಂದ್ರ ಪ್ರತಾಪ್ ಸಿಂಗ್ ಅಲಿಯಾಸ್ ಮೋನು ಗುರುವಾರ ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಗ್ಯಾನೆಂದ್ರ ಪ್ರತಾಪ್ ಸಿಂಗ್ ಅವರು ಗ್ಯಾಂಗ್ಸ್ಟರ್ ಕಾಯ್ದೆಯಡಿ ದಾಖಲಾಗಿದ್ದ ಹಳೆಯ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದು, ಬಳಿಕ ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೌ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬಾನ್ಸ್ದಿಹ್ ರೋಡ್ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್ಎಚ್ಒ) ವಂಶ್ ಬಹಾದುರ್ ಸಿಂಗ್ ಅವರು, 'ಚಂದ್ರನಾಥ್ ರಾಥ್ ಹತ್ಯೆ ಪ್ರಕರಣ ಸೇರಿದಂತೆ ಆರೋಪಿಯ ವಿರುದ್ಧ ಒಟ್ಟು 12 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಆತ 2023ರಲ್ಲಿ ಬಾನ್ಸ್ದಿಹ್ ರೋಡ್ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಗ್ಯಾಂಗ್ಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು' ಎಂದು ತಿಳಿಸಿದ್ದಾರೆ.
ಆರೋಪಿಯ ಪರ ವಕೀಲ ಕೈಶ್ ಸಿಂಗ್ ಅವರ ಪ್ರಕಾರ, ಗ್ಯಾಂಗ್ಸ್ಟರ್ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಅವರು ಅವರ ಕಕ್ಷಿದಾರನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೇ 25ರಂದು ಪ್ರಕರಣದ ವಿಚಾರಣೆಗೆ ಹಾಜರಾಗದ ಕಾರಣ ನ್ಯಾಯಾಲಯವು ಆರೋಪಿಯ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿತ್ತು ಎಂದು ಅವರು ತಿಳಿಸಿದ್ದಾರೆ.
ಸಿಬಿಐ ಅಧಿಕಾರಿಗಳು ಆರೋಪಿಯನ್ನು ಶರಣಾಗುವಂತೆ ಒತ್ತಡ ಹೇರುತ್ತಿದ್ದು, ತನಿಖೆಯ ಭಾಗವಾಗಿ ಇತ್ತೀಚೆಗೆ ಅವರ ನಿವಾಸದ ಸಿಸಿಟಿವಿ ದೃಶ್ಯಾವಳಿಗಳನ್ನೂ ವಶಪಡಿಸಿಕೊಂಡಿದ್ದಾರೆ ಎಂದು ವಕೀಲರು ಆರೋಪಿಸಿದ್ದಾರೆ. ಇನ್ನೊಂದೆಡೆ, ಆರೋಪಿಯ ಪತ್ನಿ ಮಹಿಮಾ ಸಿಂಗ್ ಅವರು ತಮ್ಮ ಪತಿ ನಿರಪರಾಧಿ ಎಂದು ಹೇಳಿದ್ದು, ಸಿಬಿಐ ತನಿಖೆಯ ಮೇಲೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
"ನನ್ನ ಪತಿಯನ್ನು ಚಂದ್ರನಾಥ್ ರಾಥ್ ಹತ್ಯೆ ಪ್ರಕರಣದಲ್ಲಿ ಸುಳ್ಳಾಗಿ ಸಿಲುಕಿಸಲಾಗಿದೆ. ನಮಗೆ ಸಿಬಿಐ ಮೇಲೆ ಸಂಪೂರ್ಣ ನಂಬಿಕೆ ಇದೆ ಮತ್ತು ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ. ಸಿಬಿಐ ಹಾಗೂ ಪೊಲೀಸ್ ತಂಡಗಳು ಆಗಾಗ್ಗೆ ತಮ್ಮ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸುತ್ತಿವೆ ಎಂದು ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಯೊಬ್ಬರು ಮಾಡಿರುವುದಾಗಿ ಹೇಳಲಾದ ವಿಡಿಯೊ ಹಾಗೂ ಫೇಸ್ಬುಕ್ ಪೋಸ್ಟ್ ವೈರಲ್ ಆಗಿತ್ತು. ಅದರಲ್ಲಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣದ ಬಗ್ಗೆ ನ್ಯಾಯಸಮ್ಮತ ತನಿಖೆ ನಡೆಸುವಂತೆ ಮನವಿ ಮಾಡಿದ್ದರು.
ಆ ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ, ತಮ್ಮ ಗ್ರಾಮದ ಮುಕೇಶ್ ಕುಮಾರ್ ಸಿಂಗ್ ಮತ್ತು ಸಂದೀಪ್ ಸಿಂಗ್ ಸೇರಿದಂತೆ ಮೂವರು ವ್ಯಕ್ತಿಗಳೇ ರಾಥ್ ಹತ್ಯೆಯ ಪ್ರಮುಖ ಸಂಚುಕೋರರು ಎಂದು ಆರೋಪಿಸಲಾಗಿತ್ತು. ಜೊತೆಗೆ ನಿಶಾಂತ್ ಸಿಂಗ್ ಎಂಬ ಮತ್ತೊಬ್ಬ ವ್ಯಕ್ತಿಯೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಲಾಗಿತ್ತು.
ಚಂದ್ರನಾಥ್ ರಾಥ್ ಅವರನ್ನು ಮೇ 6 ರಂದು ಪಶ್ಚಿಮ ಬಂಗಾಳದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.