ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ ಶುಕ್ರವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಈ ಬೆಳವಣಿಗೆಯನ್ನು ತಮಿಳುನಾಡಿನಲ್ಲಿ ಪ್ರಮುಖ ರಾಜಕೀಯ ಘಟನೆಯಾಗಿ ಮತ್ತು ಬಿಜೆಪಿಗೆ ಹಿನ್ನಡೆಯಾಗಿ ನೋಡಲಾಗುತ್ತಿದೆ.
ರಾಜೀನಾಮೆ ನಡುವೆ ಬಿಜೆಪಿ ಮಾಜಿ ಐಪಿಎಸ್ ಅಧಿಕಾರಿಗೆ ಮುಂಬರುವ ಚುನಾವಣೆಯಲ್ಲಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಬಿಜೆಪಿ ಆಫರ್ ನೀಡಿತ್ತು ಎಂಬ ವರದಿಗಳು ಕೇಳಿಬರುತ್ತಿವೆ. ಆದರೆ ಅದನ್ನು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಆದಾಗ್ಯೂ, ಈ ಹೇಳಿಕೆ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಆಂಧ್ರಪ್ರದೇಶದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗಳು ನಡೆಯಲಿವೆ. ಆ ಸ್ಥಾನಗಳಲ್ಲಿ ಒಂದನ್ನು ಅಣ್ಣಾಮಲೈಗೆ ಬಿಜೆಪಿ ನೀಡಿತ್ತು ಎಂದು ಎನ್ನಲಾಗಿತ್ತು. ಆದರೆ ಈಗ ಬಿಜೆಪಿ ಬಿಡುಗಡೆ ಮಾಡಿದ 11 ಅಭ್ಯರ್ಥಿಗಳ ಪಟ್ಟಿಯಲ್ಲಿ ಅಣ್ಣಾಮಲೈ ಅವರ ಹೆಸರು ಇರಲಿಲ್ಲ.
ಆಂಧ್ರಪ್ರದೇಶದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹಂಚಿಕೆ ಕುರಿತು ಗುರುವಾರ NDA ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು TDP ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಮತ್ತು ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಭಾಗವಹಿಸಿದ್ದರು.
ನಾಲ್ಕು ಸ್ಥಾನಗಳಲ್ಲಿ ಎರಡು ಸ್ಥಾನಗಳು ತೆಲುಗು ದೇಶಂ ಪಕ್ಷ (TDP)ಗೆ ತಲಾ ಒಂದು ಸ್ಥಾನವನ್ನು ಬಿಜೆಪಿ ಮತ್ತು ಜನ ಸೇನಾ ಪಕ್ಷ (JSP) ಗೆ ಹಂಚಿಕೆ ಮಾಡಲಾಗುವುದು ಎಂದು ಆರಂಭದಲ್ಲಿ ನಿರ್ಧರಿಸಲಾಗಿತ್ತು.
ಆದಾಗ್ಯೂ, ಅಣ್ಣಾಮಲೈ ರಾಜೀನಾಮೆಯ ನಂತರ ಬಿಜೆಪಿ ಆ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನು ಹೆಸರಿಸದ ಹಿನ್ನೆಲೆಯಲ್ಲಿ ಅದು TDP ಗೆ ಹೋಗಿದೆ ಎಂದು ವರದಿಯಾಗಿದೆ.