ಭೋಪಾಲ್: ರಾಜ್ಯಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಿಂದ ಬಿಜೆಪಿ ಅನಿರೀಕ್ಷಿತವಾಗಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ನಂತರ, ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ ಆವರಿಸಿದ್ದು, ಶಾಸಕರನ್ನು ಪಕ್ಷದ ಆಡಳಿತವಿರುವ ರಾಜ್ಯಕ್ಕೆ ಸ್ಥಳಾಂತರಿಸಲು ಸಿದ್ಧತೆ ನಡೆಸಿದೆ .
ಜೂನ್ 18 ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ತನ್ನ ಶಾಸಕರ ಬಲದಿಂದ 2 ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಆದರೆ, ಬಿಜೆಪಿಯು ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೂಲಕ ಚುನಾವಣೆಯು ರಾಜ್ಯದಲ್ಲಿ ಹೊಸ ತಿರುವು ಪಡೆದುಕೊಂಡಿದೆ.
ಸದ್ಯ ಮಧ್ಯಪ್ರದೇಶ ವಿಧಾನಸಭೆಯ ಒಟ್ಟು ಬಲ 229 ಆಗಿದ್ದು, ರಾಜ್ಯಸಭೆಗೆ ಆಯ್ಕೆಯಾಗಲು ಒಬ್ಬ ಅಭ್ಯರ್ಥಿಗೆ ಕನಿಷ್ಠ 58 ಪ್ರಥಮ ಪ್ರಾಶಸ್ತ್ಯದ ಮತಗಳ ಅಗತ್ಯವಿದೆ. ಆಡಳಿತಾರೂಢ ಬಿಜೆಪಿ 164 ಶಾಸಕರನ್ನು ಹೊಂದಿದ್ದು, ಮೊದಲ ಎರಡು ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದು.
ಬಿಜೆಪಿ ಈಗಾಗಲೇ ತರುಣ್ ಚುಗ್ ಮತ್ತು ರಜನೀಶ್ ಅಗರ್ವಾಲ್ ಅವರನ್ನು ಕಣಕ್ಕಿಳಿಸಿದೆ. ಒಂದು ಸ್ಥಾನವನ್ನು ಪಡೆಯಲು ಸಂಖ್ಯಾಬಲ ಹೊಂದಿರುವ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿಯವರ ಆಪ್ತೆ, ಮಾಜಿ ಲೋಕಸಭಾ ಸಂಸದೆ ಮೀನಾಕ್ಷಿ ನಟರಾಜನ್ ಅವರನ್ನು ಕಣಕ್ಕಿಳಿಸಿದೆ.
ಕೊನೆಯ ದಿನದಂದು ಬಿಜೆಪಿ ಮಹೇಶ್ ಕೇವತ್ ಅವರನ್ನು ಮೂರನೇ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ ಚುನಾವಣಾ ಕಣವನ್ನು ರೋಚಕಗೊಳಿಸಿದೆ. ಮೂರನೇ ಸೀಟು ಗೆಲ್ಲಲು ಬಿಜೆಪಿಗೆ ಇನ್ನು 8 ಮತಗಳ ಕೊರತೆಯಿದೆ. ವಿರೋಧ ಪಕ್ಷದ ನಾಯಕ ಉಮಂಗ್ ಸಿಂಘಾರ್ ಅವರ ನಿವಾಸದಲ್ಲಿ ತಡರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಶಾಸಕರನ್ನು ರಾಜ್ಯದಿಂದ ಹೊರಗೆ ಕಳುಹಿಸುವ ಬಗ್ಗೆ ಚರ್ಚಿಸಲಾಗಿದ್ದು , ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಸೌನ್ಸರ್ ಶಾಸಕ ವಿಜಯ್ ರೇವನಾಥ್ ಚೌರೆ ಪಿಟಿಐಗೆ ನೀಡಿದ ಹೇಳಿಕೆಯಲ್ಲಿ, ಎಲ್ಲಾ ಕಾಂಗ್ರೆಸ್ ಶಾಸಕರನ್ನು ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಶಾಸಕರಾದ ಯಾದವೇಂದ್ರ ಸಿಂಗ್ ಮತ್ತು ಬಾಬು ಜಾಂಡೆಲ್ ಕೂಡ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ.
ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಸಿಂಘರ್, ಬಿಜೆಪಿ ಸದಸ್ಯರು "ನೋಟುಗಳಿಂದ ತುಂಬಿದ ಚೀಲಗಳೊಂದಿಗೆ ತಮ್ಮ ಬಳಿಗೆ ಬಂದಿದ್ದಾರೆ ಎಂದು ಕೆಲವು ಪಕ್ಷದ ಶಾಸಕರು ಹೇಳಿದ್ದರು, ಆದರೆ ಅವರು ಅವರನ್ನು ದೂರವಿಟ್ಟಿದ್ದಾರೆ. ಪಕ್ಷವು ತನ್ನ ಶಾಸಕರನ್ನು ಕಾಂಗ್ರೆಸ್ ಆಡಳಿತವಿರುವ ರಾಜ್ಯಕ್ಕೆ ಸ್ಥಳಾಂತರಿಸಲಿದೆ ಎಂದು ತಿಳಿಸಿದ್ದಾರೆ.
2020ರಲ್ಲಿ ರಾಜ್ಯದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಶಾಸಕರು ಬಂಡಾಯವೆದ್ದು ರಾಜೀನಾಮೆ ನೀಡಿದ್ದರಿಂದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು.