ನವದೆಹಲಿ: ಮಧ್ಯಪ್ರದೇಶ ವಿಧಾನಸಭೆಯಿಂದ ಮೂರು ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ನಾಯಕೀಯ ತಿರುವು ಪಡೆದುಕೊಂಡಿದ್ದು, ತಾವು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಗುರುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮಧ್ಯಪ್ರದೇಶದ ಮೂರು ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ.
ಪ್ರಮಾಣಪತ್ರದಲ್ಲಿ ಪ್ರಕರಣವೊಂದರ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಮಂಗಳವಾರ ಚುನಾವಣಾ ಅಧಿಕಾರಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿದ್ದಾರೆ.
ರಾಜ್ಯಸಭಾ ಚುನಾವಣಾ ರಿಟರ್ನಿಂಗ್ ಅಧಿಕಾರಿ ಅರವಿಂದ್ ಶರ್ಮಾ ಹೊರಡಿಸಿದ ಆದೇಶದಲ್ಲಿ, ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದ ನಂತರ, ಮೀನಾಕ್ಷಿ ನಟರಾಜನ್ ಅವರು ಅಪೂರ್ಣ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಕಂಡುಬಂದಿದೆ. ಅವರ ನಾಮಪತ್ರದೊಂದಿಗೆ ಸಲ್ಲಿಸಲಾದ ನಮೂನೆ 26 ರಲ್ಲಿ ದಾಖಲಾಗಿರುವ ಪ್ರಕರಣವೊಂದರ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಬಚ್ಚಿಟ್ಟಿದ್ದಾರೆ ಎಂದು ಹೇಳಲಾಗಿದೆ.
ಮಧ್ಯಪ್ರದೇಶದ ವಿಧಾನಸಭೆ ಅಧಿಕಾರಿಯೊಬ್ಬರ ಪ್ರಕಾರ, ರಾಜ್ಯಸಭೆಯ ಮೂರನೇ ಸ್ಥಾನಕ್ಕೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಹೇಶ್ ಕೇವಟ್ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದು, 'ತೆಲಂಗಾಣದಲ್ಲಿ ದಾಖಲಾಗಿರುವ ಪ್ರಕರಣವೊಂದರ ಮಾಹಿತಿಯನ್ನು ಮೀನಾಕ್ಷಿ ನಟರಾಜನ್ ತಮ್ಮ ಅಫಿಡವಿಟ್ನಲ್ಲಿ ಉಲ್ಲೇಖಿಸಿಲ್ಲ' ಎಂದು ಆರೋಪಿಸಿದ್ದಾರೆ.
ಜೂನ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು ಮತ್ತು ಮಂಗಳವಾರದಿಂದ ನಾಮಪತ್ರಗಳ ಪರಿಶೀಲನೆ ಪ್ರಾರಂಭವಾಯಿತು.