ರಾಯ್ಪುರ: ಛತ್ತೀಸ್ಗಢದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಪ್ರತಿದಿನ ವೇದ ಮಂತ್ರಗಳ ಪಠಣವನ್ನು ಕಡ್ಡಾಯಗೊಳಿಸಿದ್ದು, ಸರ್ಕಾರದ ಆದೇಶದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
ಛತ್ತೀಸ್ಗಢದಲ್ಲಿ 2026-27ನೇ ಶೈಕ್ಷಣಿಕ ವರ್ಷ ಜೂನ್ 16ರಿಂದ ಆರಂಭವಾಗಲಿದ್ದು, ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗಾಯತ್ರಿ ಮಂತ್ರ, ಸರಸ್ವತಿ ವಂದನೆ ಸೇರಿದಂತೆ ವೇದ ಮಂತ್ರಗಳನ್ನು ವಿದ್ಯಾರ್ಥಿಗಳು ಪ್ರತಿದಿನ ಪಠಿಸಬೇಕೆಂದು ರಾಜ್ಯ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಕ್ರಮವನ್ನು ವಿರೋಧ ಪಕ್ಷ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದು, ಇದು ಶಿಕ್ಷಣ ಕ್ಷೇತ್ರದ “ಕೇಸರೀಕರಣ” ಕೇಸರೀಕರಣದ ಯತ್ನ ಎಂದು ಆರೋಪಿಸಿದೆ. ಆದರೆ, ಬಿಜೆಪಿ ಸರ್ಕಾರ ಇದನ್ನು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳು ಮತ್ತು ನೈತಿಕತೆ ಬೆಳೆಸುವ ಪ್ರಯತ್ನ ಎಂದು ಸಮರ್ಥಿಸಿಕೊಂಡಿದೆ.
ಛತ್ತೀಸ್ಗಢ ಶಾಲಾ ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ, ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆ ಹಾಗೂ ಸಾಂಸ್ಕೃತಿಕ ಅರಿವು ಹೆಚ್ಚಿಸುವ ಉದ್ದೇಶದಿಂದ ಪ್ರತಿದಿನ ನಿಗದಿತ ದಿನಚರಿಯನ್ನು ಅನುಸರಿಸಲಾಗುತ್ತದೆ. ಬೆಳಗಿನ ಪ್ರಾರ್ಥನಾ ಸಭೆಯಲ್ಲಿ ರಾಷ್ಟ್ರಗೀತೆ, ದೀಪ ಮಂತ್ರ, ಸರಸ್ವತಿ ವಂದನೆ, ಗುರು ಮಂತ್ರ ಹಾಗೂ ಮಹನೀಯರ ಜೀವನ ಚರಿತ್ರೆಯ ವಾಚನ ಕಡ್ಡಾಯವಾಗಿರಲಿದೆ.
ಇದರ ಜೊತೆಗೆ ಮಧ್ಯಾಹ್ನದ ಊಟಕ್ಕೂ ಮುನ್ನ ವಿದ್ಯಾರ್ಥಿಗಳು ‘ಭೋಜನ ಮಂತ್ರ’ ಪಠಿಸಬೇಕಾಗುತ್ತದೆ. ಶಾಲಾ ದಿನದ ಕೊನೆಯಲ್ಲಿ ನಾಡ ಗೀತೆ, ಗಾಯತ್ರಿ ಮಂತ್ರ ಮತ್ತು ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.
ಈ ನಿರ್ಧಾರವನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ. ಸರ್ಕಾರಿ ಶಾಲೆಗಳ ಜಾತ್ಯತೀತ ಸ್ವರೂಪಕ್ಕೆ ಇದು ಧಕ್ಕೆ ತರುತ್ತದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಮಾಧ್ಯಮ ಘಟಕದ ಅಧ್ಯಕ್ಷ ಸುಶೀಲ್ ಆನಂದ್ ಶುಕ್ಲಾ ಅವರು ಮಾತನಾಡಿ, “ಬಿಜೆಪಿ ಸರ್ಕಾರ ಜಾತ್ಯತೀತ ಸರ್ಕಾರಿ ಶಾಲೆಗಳನ್ನು ಸರಸ್ವತಿ ಶಿಶು ಮಂದಿರಗಳ ಮಾದರಿಯಲ್ಲಿ ನಡೆಸಲು ಮುಂದಾಗಿದೆ. ಸರ್ಕಾರಿ ಶಾಲೆಗಳಲ್ಲಿ ವಿವಿಧ ಧರ್ಮ ಮತ್ತು ಸಮುದಾಯಗಳ ಮಕ್ಕಳು ಓದುತ್ತಾರೆ. ಹೀಗಾಗಿ ಧಾರ್ಮಿಕ ಪಠಣವನ್ನು ಕಡ್ಡಾಯಗೊಳಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ” ಎಂದು ಟೀಕಿಸಿದ್ದಾರೆ.
ಮುಂದುವರಿದು, “ಈ ನಿರ್ಧಾರದಿಂದ ಮುಂದಿನ ದಿನಗಳಲ್ಲಿ ಇತರ ಧರ್ಮಗಳ ಸಮುದಾಯಗಳೂ ಇದೇ ರೀತಿಯ ಬೇಡಿಕೆಗಳನ್ನು ಮುಂದಿಡುವ ಸಾಧ್ಯತೆ ಇದೆ” ಎಂದು ಎಚ್ಚರಿಸಿದ್ದಾರೆ.
ಇನ್ನೊಂದೆಡೆ, ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದೆ. ಈ ಯೋಜನೆ ರಾಜಕೀಯ ಉದ್ದೇಶದಿಂದಲ್ಲ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಮತ್ತು ಶಿಸ್ತು ಬೆಳೆಸುವ ಉದ್ದೇಶದಿಂದ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದೆ.
ರಾಜ್ಯದ ಶಾಲಾ ಶಿಕ್ಷಣ ಸಚಿವ ಗಜೇಂದ್ರ ಯಾದವ್ ಮಾತನಾಡಿ, “ಈ ಪ್ರಾರ್ಥನೆಗಳನ್ನು ಪರಿಚಯಿಸುವುದರ ಉದ್ದೇಶ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಸ್ಕಾರ ಮತ್ತು ಉತ್ತಮ ಮೌಲ್ಯಗಳನ್ನು ಬೆಳೆಸುವುದಾಗಿದೆ” ಎಂದು ಸ್ಪಷ್ಟಪಡಿಸಿದರು.
ಇದಲ್ಲದೆ, ಜೂನ್ 16ರಂದು ಹೊಸ ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ‘ಶಾಲಾ ಪ್ರವೇಶೋತ್ಸವ’ವನ್ನು ಆಯೋಜಿಸಲಾಗಿದ್ದು, ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಸಾಂಪ್ರದಾಯಿಕ ತಿಲಕ ಕಾರ್ಯಕ್ರಮದ ಮೂಲಕ ಸ್ವಾಗತಿಸಲು ಸರ್ಕಾರ ಯೋಜಿಸಿದೆ.